ADVERTISEMENT

ಬೆಂಗಳೂರು ಸಮೀಪ ಜ್ಞಾನ ನಗರ: ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2023, 23:33 IST
Last Updated 23 ಮಾರ್ಚ್ 2023, 23:33 IST
   

ಬೆಂಗಳೂರು: ‘ನಗರದ ಸಮೀಪವೇ ಎರಡು ಸಾವಿರ ಎಕರೆ ಪ್ರದೇಶದಲ್ಲಿ ಜ್ಞಾನನಗರ ನಿರ್ಮಾಣ ಮಾಡಬೇಕು ಎಂಬುದು ನನ್ನ ಕನಸು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ನವೀಕೃತ ಆವರಣದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ‘ವಿದೇಶಕ್ಕೆ ಹೋಗಿ ಕಲಿಯಲು ಸಾಧ್ಯವಾಗದವರಿಗೆ ಅಷ್ಟೇ ಗುಣಮಟ್ಟದ ಶಿಕ್ಷಣ ಬೆಂಗಳೂರಿನಲ್ಲೇ ದೊರೆಯುವಂತೆ ಮಾಡಬೇಕೆಂಬ ಆಸೆ ಇದೆ’ ಎಂದರು.

‘ರಾಜ್ಯ, ಹೊರ ರಾಜ್ಯಗಳ ಮತ್ತು ವಿದೇಶದ ಪ್ರಮುಖ ವಿಶ್ವವಿದ್ಯಾಲಯಗಳು, ಐಐಟಿಗಳು, ಶಿಕ್ಷಣ ಸಂಸ್ಥೆಗಳಿಗೆ ಜ್ಞಾನ ನಗರದಲ್ಲಿ ಅವಕಾಶ ನೀಡಲಾಗುವುದು. ಕರ್ನಾಟಕದ ಭವಿಷ್ಯದ ಒಕ್ಕಣೆಯ‌ನ್ನು ಕರ್ನಾಟಕದ ವಿದ್ಯಾರ್ಥಿಗಳೇ ಬರೆಯುವಂತೆ ತಯಾರು ಮಾಡುವುದು ಇದರ ಉದ್ದೇಶ’ ಎಂದು ಹೇಳಿದರು.

ADVERTISEMENT

ಬೆಂಗಳೂರು ವಿಶ್ವವಿದ್ಯಾಲಯದ ಭಾಗದಲ್ಲಿ ಆರು ಶೈಕ್ಷಣಿಕ ಸಂಸ್ಥೆಗಳು, ಡೀಮ್ಡ್ ವಿಶ್ವವಿದ್ಯಾಲಯಗಳಿವೆ. ಅವುಗಳ ಅಭಿವೃದ್ಧಿಗೆ ಹಣ ನೀಡಲಾಗುತ್ತಿದೆ. ಇವೆಲ್ಲವನ್ನೂ ಸೇರಿಸಿ ಬೆಂಗಳೂರು ಶೈಕ್ಷಣಿಕ ಜಿಲ್ಲೆಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದು ಯಶಸ್ವಿಯಾದರೆ ರಾಜ್ಯದ ಬೇರೆ ಭಾಗಗಳಿಗೂ ವಿಸ್ತರಿಸಲಾಗುವುದು ಎಂದರು.

ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ‘ಐತಿಹಾಸಿಕ ಹಿನ್ನೆಲೆ ಇರುವ ಬೆಂಗಳೂರು ನಗರ ವಿಶ್ವವಿದ್ಯಾಲಯ ಇಡೀ ದೇಶದಲ್ಲೇ ವಿರಾಜಿಸಬೇಕು. ಕಲಿಕೆಯಲ್ಲಿ ಸೀಮಿತವಾಗದೆ ಸೀಮೋಲ್ಲಂಘನೆ ಮಾಡಬೇಕು. ಶಿಕ್ಷಣ ಮತ್ತು ಉದ್ಯಮಶೀಲತೆ ನಡುವೆ ಇರುವ ಕಂದಕವನ್ನು ಸರಿಪಡಿಸಬೇಕು. ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.