ADVERTISEMENT

ಹಿಂದೂ ಧರ್ಮದ ಬಗ್ಗೆ ಪೋಸ್ಟ್‌: ನಟ ಚೇತನ್‌ಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2023, 23:13 IST
Last Updated 23 ಮಾರ್ಚ್ 2023, 23:13 IST
ನಟ ಚೇತನ್
ನಟ ಚೇತನ್   

ಬೆಂಗಳೂರು: ‘ಸಾಮಾಜಿಕ ಮಾಧ್ಯಮಗಳಲ್ಲಿ ಬರಹ ಪ್ರಕಟಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ’ ಎಂಬ ಆರೋಪದಡಿ ಬಂಧಿಸಲಾಗಿದ್ದ ನಟ ಎ. ಚೇತನ್‌ ಕುಮಾರ್‌ ಅವರಿಗೆ ನಗರದ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.

‘ಚೇತನ್‌ ಅವರು ಹಿಂದೂ ಧರ್ಮದ ಬಗ್ಗೆ ಫೇಸ್‌ಬುಕ್ ಹಾಗೂ ಟ್ವಿಟರ್‌ ಖಾತೆಗಳಲ್ಲಿ ಬರಹ ಪ್ರಕಟಿಸಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ’ ಎಂದು ಆರೋಪಿಸಿ ಶಿವಕುಮಾರ್ ಎಂಬುವರು ದೂರು ನೀಡಿದ್ದರು.

ಎಫ್‌ಐಆರ್ ದಾಖಲಿಸಿಕೊಂಡಿದ್ದ ಶೇಷಾದ್ರಿಪುರ ಪೊಲೀಸರು, ಚೇತನ್‌ ಅವರನ್ನು ಮಾರ್ಚ್ 21ರಂದು ಬಂಧಿಸಿದ್ದರು. ನಂತರ, ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ADVERTISEMENT

ಜಾಮೀನು ಕೋರಿ ಚೇತನ್ ಪರ ವಕೀಲರು 32ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೆ.ಲತಾ ಅವರು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ₹ 25 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ನೀಡಬೇಕು ಹಾಗೂ ತನಿಖೆಗೆ ಸಹಕರಿಸಬೇಕೆಂಬ ಷರತ್ತುಗಳನ್ನು ವಿಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.