ಬೀದರ್: ವಸತಿ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಲೈಂಗಿಕ ಕಾರ್ಯಕರ್ತೆಯರ ಯೂನಿಯನ್ ಸದಸ್ಯರು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ 100 ಲೈಂಗಿಕ ಕಾರ್ಯಕರ್ತೆಯರು ಇದ್ದಾರೆ. ಇವರೆಲ್ಲ ಬಡತನದಿಂದಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿದ್ದಾರೆ. ಸ್ವಂತ ಮನೆ ಇಲ್ಲದ ಕಾರಣ ಬಾಡಿಗೆ ಮನೆಗಳಲ್ಲಿ ವಾಸ ಮಾಡಬೇಕಾದ ಅನಿವಾರ್ಯತೆ ಇದೆ. ಬಹುತೇಕ ಮನೆಗಳ ಮಾಲೀಕರು ಲೈಂಗಿಕ ಕಾರ್ಯಕರ್ತೆಯರಿಗೆ ಬಾಡಿಗೆ ಮನೆ ನೀಡುತ್ತಿಲ್ಲ. ಬಾಡಿಗೆಗೆ ಮನೆ ಕೊಟ್ಟರೂ ಅಧಿಕ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ದೂರಿದರು.
ವಸತಿ ಯೋಜನೆಗಳ ಅಡಿಯಲ್ಲಿ ಲೈಂಗಿಕ ಕಾರ್ಯಕರ್ತೆಯರಿಗೆ ನಿವೇಶನ ಹಾಗೂ ಮನೆ ಮಂಜೂರು ಮಾಡಬೇಕು. ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಲೈಂಗಿಕ ಕಾರ್ಯಕರ್ತೆಯರಿಗೆ ನಿವೇಶನ ಕೊಡುವ ದಿಸೆಯಲ್ಲಿ ಯಾವುದೇ ಪ್ರಯತ್ನಗಳು ನಡೆದಿಲ್ಲ. ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಮನವಿ ಮಾಡಿದರು. ಸಮುದಾಯ ನಾಯಕಿ ಶ್ರೀದೇವಿ, ಯುನಿಯನ್ ಉಪಾಧ್ಯಕ್ಷೆ ಭೂಮಿಕಾ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.