
ಶೆಟ್ಟಿಕೊಪ್ಪ(ಎನ್.ಆರ್.ಪುರ): ಸರ್ಕಾರ ಕಾನೂನುಗಳಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತಂದಾಗ ಮಾತ್ರ ಗ್ರಾಮದ ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.
ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರ ರೂಪಿಸಿರುವ ‘ಅಧಿಕಾರಿಗಳ ನಡೆ ಗ್ರಾಮದ ಕಡೆಗೆ’ ಕಾರ್ಯಕ್ರಮ ಬಹಳ ಹಿಂದಿನಿಂದ ಇದೆ. ಬೇರೆ ಬೇರೆ ಸರ್ಕಾರಗಳ ಅವಧಿಯಲ್ಲಿ ಬೇರೆ ಹೆಸರು ನೀಡುತ್ತ ಬರಲಾಗಿದೆ. ಮಲೆನಾಡು ಭಾಗದ ಗ್ರಾಮಗಳಲ್ಲಿ ಫಾರಂ ನಂ50, 53, 94ಸಿ, ಸೊಪ್ಪಿನಬೆಟ್ಟ ಸಮಸ್ಯೆಗಳಿವೆ. ಜನರಿಗೆ ಸ್ಥಳದಲ್ಲೇ ಹಕ್ಕುಪತ್ರ ಕೊಡುವ ವ್ಯವಸ್ಥೆಯಾಗಲು ಅರಣ್ಯ ಸಮಸ್ಯೆ ಬಗೆಹರಿಸುವ ಕಾನೂನುಗಳು ರೂಪಿತವಾಗಬೇಕು. ಅರಣ್ಯ, ಗೋಮಾಳ ಮತ್ತು ಕಂದಾಯ ಜಾಗಗಳನ್ನು ಸರ್ವೆ ಮಾಡಿ ಗಡಿ ಗುರುತಿಸಿದಾಗ ಮಾತ್ರ ಅರಣ್ಯ ಹೊರತುಪಡಿಸಿದ ಜಮೀನಿಗೆ ಹಕ್ಕುಪತ್ರ ಕೊಡಲು ಸಾಧ್ಯವಾಗುತ್ತದೆ ಎಂದರು.
ಅರಣ್ಯ ಇಲಾಖೆಯವರು ಗ್ರಾಮಸ್ಥರೊಂದಿಗೆ ಮಾನವೀಯತೆಯಿಂದ ವರ್ತಿಸಬೇಕು. ಕಂದಾಯ ಇಲಾಖೆಯಲ್ಲಿ ಯಾವುದೇ ಅಧಿಕಾರಿ ಸಾರ್ವಜನಿಕರ ಕೆಲಸ ಮಾಡಿಕೊಡಲು ಲಂಚ ಕೇಳಿದರೆ ಲಿಖಿತ ದೂರು ನೀಡಬಹುದು. ಆಗ ಅವರ ಮೇಲೆ ಕ್ರಮಕ್ಕೆ ಶಿಫಾರಸು ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ಮಾತನಾಡಿ, ‘ಅಧಿಕಾರಿಗಳ ನಡೆ ಹಳ್ಳಿ ಕಡೆಗೆ ಎಂಬುದು ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರ ಕನಸಿನ ಕಾರ್ಯಕ್ರಮ. ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು ಎಂಬುದು ಈ ಕಾರ್ಯಕ್ರಮದ ಆಶಯ. ಮುಂದಿನ ದಿನಗಳಲ್ಲಿ ಶೃಂಗೇರಿ ಕ್ಷೇತ್ರದ ವ್ಯಾಪ್ತಿಯಲ್ಲೂ ಗ್ರಾಮ ವಾಸ್ತವ್ಯ ಮಾಡಲಾಗುವುದು’ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಆರ್.ಸದಾಶಿವ ಮಾತನಾಡಿ, ‘ಈ ಭಾಗದ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ 736 ಕಿ.ಮೀ ಗ್ರಾಮೀಣ ರಸ್ತೆಯಿದೆ. ಸರ್ಕಾರದಿಂದ ರಸ್ತೆ ಅಭಿವೃದ್ಧಿಗೆ ವಾರ್ಷಿಕ ಕೇವಲ ₹ 23 ಲಕ್ಷ ಅನುದಾನ ಬಿಡುಗಡೆಯಾಗುತ್ತದೆ. ಹಾಗಾಗಿ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಸಮಸ್ಯೆಯಾಗಿದೆ’ ಎಂದರು.
ತಹಶೀಲ್ದಾರ್ ಎಸ್.ರೇಣುಕಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷ ರವೀಂದ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಿಲ್ಲಿ, ಸದಸ್ಯರಾದ ಎ.ಬಿ.ಮಂಜುನಾಥ್, ವಾಣಿ, ಪೂರ್ಣಿಮಾ, ಚಂದ್ರಶೇಖರ್, ಸುನಿಲ್ ಕುಮಾರ್, ಶೈಲಾ, ಹೆಚ್ಚುವರಿ ತಹಶೀಲ್ದಾರ್ ಚಂದ್ರಶೇಖರ್, ಕಂದಾಯ ನಿರೀಕ್ಷಕ ಮಂಜುನಾಥ್, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಎ.ಎಲ್.ಮಹೇಶ್, ಎಸ್ಡಿಎಂಸಿ ಅಧ್ಯಕ್ಷ ಉದಯ್ ಶೆಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.