ಗುಂಡ್ಲುಪೇಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತ್ ಜೋಡೊ ಯಾತ್ರೆ ಸಂಬಂಧ ನಾಯಕರಿಗೆ ಸ್ವಾಗತ ಕೋರಲು ಅಳವಡಿಕೆ ಮಾಡಿದ್ದ ಫ್ಲೆಕ್ಸ್ ಗಳನ್ನೂ ಕಿಡಿಗೇಡಿಗಳು ರಾತ್ರೋರಾತ್ರಿ ಹರಿದು ಹಾಕಿರುವುದಕ್ಕೆ ಕಾಂಗ್ರೆಸ್ ನಾಯಕರು ಸೇರಿದಂತೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಪಟ್ಟಣ ಊಟಿ ಸರ್ಕಲ್ ನಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಅದರ ಎರಡು ಬದಿಯಲ್ಲಿ ಅಳವಡಿಕೆ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರ ನಾಯಕರ 40ಕ್ಕೂ ಅಧಿಕ ಫ್ಲೇಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ಈ ವಿಚಾರದ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.
ಈ ಕುರಿತು ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶಪ್ರಸಾದ್ ಪ್ರತಿಕ್ರಿಯೆ ನೀಡಿ, 'ಭಾರತ್ ಜೋಡೊ ಯಾತ್ರೆ ಗುಂಡ್ಲುಪೇಟೆಯಿಂದ ಆರಂಭವಾಗುತ್ತಿರುವ ಕಾರಣ ಯಾತ್ರೆ ತಡೆಯಬೇಕು ಎಂಬ ಉದ್ದೇಶದಿಂದ ದುಷ್ಕರ್ಮಿಗಳು ರಾತ್ರೋರಾತ್ರಿ ಫ್ಲೆಕ್ಸ್ ಗಳನ್ನು ಹರಿದು ಹಾಕಿದ್ದಾರೆ. ಇದ್ಯಾವುದಕ್ಕೂ ನಾವು ಹೆದರುವುದಿಲ್ಲ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಲಾಗಿದೆ' ಎಂದು ತಿಳಿಸಿದರು.
ಪೊಲೀಸರ ನಿರ್ಲಕ್ಷ್ಯ: ಪಟ್ಟಣದ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ದುಷ್ಕರ್ಮಿಗಳು ಫ್ಲೆಕ್ಸ್ ಹರಿದು ಹಾಕಲು ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದ್ದು, ಸೂಕ್ತ ಭದ್ರತೆ ನೀಡಲು ವಿಫಲರಾಗಿದ್ದಾರೆ. ಈ ಅವಘಡಕ್ಕೆ ಅವರೇ ನೇರ ಕಾರಣ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರ ಹಾಕಿದರು.
ಪಕ್ಷದ ಕಾರ್ಯಕರ್ತರು ಮಾಡಿಲ್ಲ: ಬಿಜೆಪಿ ಶಾಸಕ ಸಿ.ಎಸ್.ನಿರಂಜನಕುಮಾರ್ ಮಾತನಾಡಿ, 'ನಾನುಬೆಳಿಗ್ಗೆ ಇನ್ ಸ್ಪೆಕ್ಟರ್ ಜೊತೆ ಮಾತನಾಡಿದ್ದೇನೆ. ಫ್ಲೆಕ್ಸ್ ಹರಿದು ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದೇನೆ. ನಮ್ಮ ಕಾರ್ಯಕರ್ತರನ್ನು ವಿಚಾರಿಸಿದ್ದೇನೆ. ನಮ್ಮವರು ಯಾರೂ ಮಾಡಿಲ್ಲ. ಇಬ್ಬರು ಬೈಕ್ ನಲ್ ಲಿಬಂದವರು ಈ ಕೃತ್ಯ ಎಸಗಿದ್ದಾರೆ ಎಂಬುದು ಗೊತ್ತಾಗಿದೆ. ಪ್ರಚಾರಕ್ಕಾಗಿ ಕಾಂಗ್ರೆಸ್ನವರೇ ಮಾಡಿರುವ ಸಾಧ್ಯತೆ ಇದೆ. ಪೊಲೀಸರು ತನಿಖೆ ನಡೆಸಲಿದ್ದಾರೆ. ಯಾರೇ ಮಾಡಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.