ಹಾವೇರಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯ ಶಾಲಾ-ಕಾಲೇಜು- ಹಾಸ್ಟೆಲ್ಗಳ ವಿದ್ಯಾರ್ಥಿಗಳಿಗೆ ಹಾಗೂ ನರೇಗಾ ಕೂಲಿ ಕಾರ್ಮಿಕರಿಗೆ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ನೇತೃತ್ವದಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.
ಜಿಲ್ಲೆಯ ವಿವಿಧ ತಾಲ್ಲೂಕುಗಳ ಪದವಿ ಪೂರ್ವ ಕಾಲೇಜುಗಳಲ್ಲಿ ಕಡ್ಡಾಯ ಮತದಾನ ಮಾಡುವ ಕುರಿತು ಪ್ರತಿಜ್ಞಾ ವಿಧಿ ಸ್ವೀಕಾರ, ಮಕ್ಕಳಿಂದ ಪೇಂಟಿಂಗ್ ಮೂಲಕ ಜಾಗೃತಿ, ಹಾಸ್ಟೆಲ್ಗಳ ಪುಟ್ಟ ಮಕ್ಕಳು ತಂದೆ -ತಾಯಿಯವರಿಗೆ ಪತ್ರ ಬರೆಯುವ ಮೂಲಕ ಕಡ್ಡಾಯ ಮತದಾನ ಮತ್ತು ಯವುದೇ ಆಮಿಷಕ್ಕೆ ಒಳಗಾಗದೇ ಸ್ವ– ಇಚ್ಛೆಯಿಂದ ಮತದಾನಕ್ಕೆ ಪತ್ರ ಬರೆಸಲಾಗುತ್ತಿದೆ.
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಮಗಳಲ್ಲಿ ಸಂಚರಿಸಿ ಮತದಾನದ ಕುರಿತು ಪ್ರತಿಜ್ಞಾನ ವಿಧಿ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ವಿವಿ ಪ್ಯಾಟ್ ಮತ್ತು ಇವಿಎಂ ಬಳಕೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿರುವುದು ವಿಶೇಷವಾಗಿದೆ.
ನರೇಗಾ ಕೆಲಸದ ಸ್ಥಳದಲ್ಲಿ ಕೂಲಿಕಾರರಿಗೆ ಬಿಡುವಿನ ಸಮಯದಲ್ಲಿ ಮತದಾನ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿ ಅವರಿಗೆ ಅರಿವು ಮೂಡಿಸುತ್ತಿರುವುದು ಜಿಲ್ಲೆಯಲ್ಲಿ ಚುನಾವಣೆ ಕಂಪು ಹರಡುತ್ತಿರುವುದು ವಿಶೇಷವಾಗಿದೆ.
‘ಮುಂಬರುವ ದಿನಗಳಲ್ಲಿ ಪ್ರತಿ ಹಂತದಲ್ಲಿಯೂ ಕಡ್ಡಾಯ ಮತದಾನ ಮತ್ತು ಚುನಾವಣೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುವುದು’ ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.