ಸೇಡಂ: ತಾಲ್ಲೂಕಿನ ಮಲ್ಲಾಬಾದ್ ಮಾರ್ಗದಿಂದ ಬೊಂದೆಂಪಲ್ಲಿ ಗ್ರಾಮಕ್ಕೆ ಬಸ್ ಒದಗಿಸುವಂತೆ ಮುಧೋಳ ಬಸ್ ನಿಲ್ದಾಣದಲ್ಲಿ ಮಂಗಳವಾರ ಶಾಲಾ ವಿದ್ಯಾರ್ಥಿನಿಯರು ಸುರಿಯುತ್ತಿರುವ ಮಳೆಯಲ್ಲಿಯೇ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಶಾಲಾ-ಕಾಲೇಜು ಆರಂಭವಾಗಿ ಅನೇಕ ದಿನಗಳಾಗುತ್ತಾ ಬಂದಿವೆ. ಈವರೆಗೂ ಬಸ್ ಆರಂಭವಾಗಿಲ್ಲ. ಬಸ್ ಓಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತನಾಡಿದ್ದೇವೆ. ಆದರೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗಿಲ್ಲ. ಶಾಲಾ-ಕಾಲೇಜುಗಳು ನಿತ್ಯವು ನಡೆಯುತ್ತಿವೆ. ಖಾಸಗಿ ವಾಹನಗಳಿಗೆ ಹಣ ಕೊಟ್ಟು ಬರಲು ಸಾಧ್ಯವಾಗುತ್ತಿಲ್ಲ. ನಮ್ಮಂತಹ ಮಧ್ಯಮ ವರ್ಗದವರು ಶಾಲೆಗೆ ತೆರಳುವುದೇ ದೊಡ್ಡದಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಪಾಲಕರು, ಹಣ ಕೊಡಲು ಕಷ್ಟಪಡುತ್ತಿದ್ದಾರೆ. ಆದ್ದರಿಂದ ಅತಿ ಶೀಘ್ರದಲ್ಲಿ ಬಸ್ ಓಡಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಮಳೆಯಲ್ಲಿ ಸುಮಾರು 10-15 ನಿಮಿಷ ಬಸ್ ತಡೆದು ಪ್ರತಿಭಟನೆ ನಡೆಸಿದರೂ ಸಹ ಯಾವ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ ಎನ್ನಲಾಗಿದೆ. ಮಳೆಯಲ್ಲಿ ಪ್ರತಿಭಟನೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದ್ದು, ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.