ADVERTISEMENT

ಮಡಿಕೇರಿ: ಕೋಳಿಬೈಲು ಚಿನ್ನಪ್ಪ ವೆಂಕಟೇಶ್‌ ‘ಕೈ’ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 7:50 IST
Last Updated 26 ಮಾರ್ಚ್ 2023, 7:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಆಮ್‌ ಆದ್ಮಿ ಪಕ್ಷದ ಮುಖಂಡ ಕೋಳಿಬೈಲು ಚಿನ್ನಪ್ಪ ವೆಂಕಟೇಶ್‌ ಅವರು ಇಲ್ಲಿನ ಪತ್ರಿಕಾ ಭವನದಲ್ಲಿ ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜಾ ಉತ್ತಪ್ಪ, ‘ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.

ಇತ್ತೀಚೆಗೆ ಜೆಡಿಎಸ್‌ನಿಂದ ಸಂಕೇತ್ ಪೂವಯ್ಯ ಅವರು ಸೇರ್ಪಡೆಗೊಂಡರು. ಈಗ ಆಮ್‌ ಆದ್ಮಿ ಪಕ್ಷದಿಂದ ಮುಖಂಡರು ಸೇರ್ಪಡೆಗೊಂಡಿದ್ದಾರೆ. ಮುಂದೆಯೂ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳಿಂದ ಮುಖಂಡರು ಪಕ್ಷಕ್ಕೆ ಬರಲಿದ್ದಾರೆ ಎಂದರು.

ADVERTISEMENT

ಅಲ್ಪಸಂಖ್ಯಾತರಿಗೆ ಇದ್ದ ಶೇ 4ರ ಮೀಸಲಾತಿಯನ್ನು ರದ್ದುಪಡಿಸಿ, ಇನ್ನೊಂದು ಸಮುದಾಯದವರಿಗೆ ನೀಡಲಾಗುವ ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿರುವುದು ಸರಿಯಲ್ಲ ಎಂದು ಅವರು ಖಂಡಿಸಿದರು.

‘ಗೋಣಿಕೊಪ್ಪಲು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಮುಸ್ಲಿಮರ ಧರ್ಮವನ್ನು ನಿಂದಿಸುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ’ ಎಂದು ಆರೋಪಿಸಿದರು.

ಕೋಳಿಬೈಲು ಚಿನ್ನಪ್ಪ ವೆಂಕಟೇಶ್‌ ಅವರು ಮಾತನಾಡಿ, ‘ಕೊಡಗಿಗೆ ಮತ್ತಷ್ಟು ಅಭಿವೃದ್ಧಿ ಬೇಕು, ಬದಲಾವಣೆ ಬೇಕು ಎಂಬ ನಿಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಪೊನ್ನಣ್ಣ ಅವರಿಗೆ ಬೆಂಬಲ ವ್ಯಕ್ತಪಡಿಸಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ’ ಎಂದು ತಿಳಿಸಿದರು.

ಕೆಪಿಸಿಸಿ ಸದಸ್ಯ ಬಿ.ಎಸ್‌.ರಮಾನಾಥ್‌, ನಾಪೋಕ್ಲು ಬ್ಲಾಕ್‌ ಅಧ್ಯಕ್ಷ ಇಸ್ಮಾಯಿಲ್‌‍, ಡಿಸಿಸಿ ಸದಸ್ಯ ಸುನೀಲ್‌ ಪತ್ರವೋ, ಭಾಗಮಂಡಲ ವಲಯ ಅಧ್ಯಕ್ಷ ದೆವಂಗೋಡಿ ಹರ್ಷ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.