ಮಡಿಕೇರಿ: ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ನೀಡಿದರು.
ಜೂನಿಯರ್ ಕಾಲೇಜು ಆವರಣದಲ್ಲಿ ₹ 4.90 ಲಕ್ಷ ವೆಚ್ಚದಲ್ಲಿ ನಗರಸಭಾ ನಿಧಿಯಿಂದ ಕೈಗೊಳ್ಳಲಾಗಿರುವ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ‘ಮಡಿಕೇರಿ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ₹ 40 ಕೋಟಿ ಬಿಡುಗಡೆಯಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿವೆ’ ಎಂದು ತಿಳಿಸಿದರು.
ನಗರಸಭಾ ನಿಧಿಯಿಂದ ₹ 4.90 ಲಕ್ಷ ರೂ ವೆಚ್ಚದಲ್ಲಿ ಮಡಿಕೇರಿ ನಗರದ ಎಲ್ಲಾ ವಾರ್ಡ್ಗಳಲ್ಲಿ ‘ನಾಮಫಲಕ’ ಅಳವಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
2022-23 ನೇ ಸಾಲಿನ 15ನೇ ಹಣಕಾಸು ಆಯೋಗದ ಅನುದಾನದಡಿ ನಗರಸಭೆಯ ಎಲ್ಲಾ ವಾರ್ಡ್ಗಳಲ್ಲಿ ₹ 11.84 ಲಕ್ಷ ವೆಚ್ಚದಲ್ಲಿ ಎಲ್ಇಡಿ ಬೀದಿ ದೀಪ ಅಳವಡಿಸಲಾಗುತ್ತಿದೆ. ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ವಿಕೇಂದ್ರಿಕೃತ ತ್ಯಾಜ್ಯ ಗೊಬ್ಬರ ಸಂಸ್ಕರಣ ಘಟಕ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ ಆಗುವುದರೊಳಗೆ ಪೂರ್ಣಗೊಳ್ಳಲಿವೆ ಎಂದು ಭರವಸೆ ನೀಡಿದರು.
ಮಡಿಕೇರಿ ನಗರ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೆಚ್ಚಿನ ಒತ್ತು ನೀಡಲಾಗಿದ್ದು, ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಆಯಾಯ ವಾರ್ಡಿನ ಸದಸ್ಯರು, ಅಧಿಕಾರಿಗಳು ಕಾಮಗಾರಿಗೆ ಸಂಬಂಧಿಸಿದಂತೆ ಗಮನಹರಿಸಿದ್ದಾರೆ ಎಂದರು.
ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ನಗರಸಭೆ ಪೌರಾಯುಕ್ತ ವಿಜಯ್, ಪ್ರಾಂಶುಪಾಲ ವಿಜಯ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.