ಕುಷ್ಟಗಿ: ಕಲಬುರ್ಗಿ ವಲಯಕ್ಕೆ ಮಂಜೂರಾಗಿರುವ ಪರೀಕ್ಷಾ ಪ್ರಾಧಿಕಾರದ ಪ್ರಾದೇಶಿಕ ಕಚೇರಿಯನ್ನು ಶೀಘ್ರದಲ್ಲಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿಯ ಶಾಸಕ ಅಮರೇಗೌಡ ಬಯ್ಯಾಪುರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಅವರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿದ್ದಾರೆ.
ಸದ್ಯ ಪರೀಕ್ಷಾ ಪ್ರಾಧಿಕಾರ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆ ಮತ್ತು ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಅಲ್ಲಿಯೇ ನಡೆಯುತ್ತಿದೆ.ಪ್ರಾದೇಶಿಕ ಕಚೇರಿ ಆರಂಭಗೊಂಡರೆ ಕಲಬುರ್ಗಿ ವಲಯದ ಅಭ್ಯರ್ಥಿಗಳಿಗೆ ಬಹಳಷ್ಟು ಅನುಕೂಲವಾಗುತ್ತದೆ. ಕೇಂದ್ರ ಕಚೇರಿಯಲ್ಲಿ ನಡೆಯುವ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆಗೆ ಹೋಗಲು ಸಾಧ್ಯವಾಗದೆ ಬಹುತೇಕ ಅಭ್ಯರ್ಥಿಗಳು ಗೈರು ಹಾಜರಾಗುತ್ತಿರುವುದರಿಂದ ಉದ್ಯೋಗಾ ವಕಾಶದಿಂದ ವಂಚಿತರಾಗುತ್ತಿದ್ದಾರೆ ಎಂದು ಅವರು ಸಚಿವರಿಗೆ ಬರೆದ ಪತ್ರದಲ್ಲಿ
ತಿಳಿಸಿದ್ದಾರೆ.
ಕಲಬುರ್ಗಿಯಲ್ಲಿನ ಪರೀಕ್ಷಾ ಪ್ರಾಧಿಕಾರದ ಪ್ರಾದೇಶಿಕ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಸಮುದಾಯ ಬಳಕೆ ನಿವೇಶನ (ಸಿ.ಎ. ಸೈಟ್) ಕೂಡ ಲಭ್ಯವಿದೆ ಎಂದು ತಿಳಿಸಿದ್ದಾರೆ.
ಅಗತ್ಯ ಅನುದಾನವೂ ಲಭ್ಯವಿದೆ ಎಂದು ಗೊತ್ತಾಗಿದೆ. ಕಟ್ಟಡ ನಿರ್ಮಾಣ ಹಾಗೂ ಪ್ರಾದೇಶಿಕ ಕಚೇರಿ ಕಾರ್ಯಾರಂಭಿಸಬೇಕು. ಈ ಸಂಬಂಧ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಅವರು
ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.