ADVERTISEMENT

ರಸ್ತೆಯಲ್ಲಿ ರಾಗಿ ಪೈರು ನಾಟಿ!

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 4:24 IST
Last Updated 24 ಜುಲೈ 2021, 4:24 IST
ಶಿರಾ ತಾಲ್ಲೂಕಿನ ಗಜ್ಜರಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿದ ಗ್ರಾಮಸ್ಥರು ರಸ್ತೆಯಲ್ಲಿ ರಾಗಿ ಪೈರು ನಾಟಿ ಮಾಡಿ ಪ್ರತಿಭಟಿಸಿದರು
ಶಿರಾ ತಾಲ್ಲೂಕಿನ ಗಜ್ಜರಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿದ ಗ್ರಾಮಸ್ಥರು ರಸ್ತೆಯಲ್ಲಿ ರಾಗಿ ಪೈರು ನಾಟಿ ಮಾಡಿ ಪ್ರತಿಭಟಿಸಿದರು   

ಶಿರಾ: ತಾಲ್ಲೂಕಿನ ಕಸಬಾ ಹೋಬಳಿಯ ಗಜ್ಜರಹಳ್ಳಿಯಲ್ಲಿ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರು ರಸ್ತೆಯಲ್ಲಿ ರಾಗಿ ಪೈರು ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಗಜ್ಜರಹಳ್ಳಿ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಚರಂಡಿ, ರಸ್ತೆ ಇಲ್ಲದೆ ಜನರು ಪರದಾಡುವಂತಾಗಿದೆ. ಮಳೆಗಾಲದಲ್ಲಿ ರಸ್ತೆಯಲ್ಲಿ‌ ನೀರು ನಿಂತು ಸಂಚಾರಕ್ಕೆ‌ ಕಷ್ಟವಾಗುತ್ತಿದೆ. ಮಕ್ಕಳು, ಹಿರಿಯ ನಾಗರಿಕರು ಸಂಕಷ್ಟ ಪಡುತ್ತಿದ್ದಾರೆ. ಈ ಬಗ್ಗೆ ಅನೇಕ ಬಾರಿ ಮನವಿ ಮಾಡಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

ಶಕ್ತಿ ಕೇಂದ್ರದ ಅಧ್ಯಕ್ಷ ಜಿ.ವಿ.ಶ್ರೀನಿವಾಸ್ ಮಾತನಾಡಿ, ಗಜ್ಜರಹಳ್ಳಿಗೆ ಡಾಂಬರು ರಸ್ತೆ, ಸಿ.ಸಿ ರಸ್ತೆ, ಚರಂಡಿ ನಿರ್ಮಾಣದ ಅವಶ್ಯಕತೆಯಿದೆ. ಅಧಿಕಾರಿಗಳು ಹಾಗೂ ಶಾಸಕರು ಈ ಬಗ್ಗೆ ಗಮನಹರಿಸಬೇಕು
ಎಂದರು.

ADVERTISEMENT

ತಾವರೆಕೆರೆ ಗ್ರಾ.ಪಂ ಉಪಾಧ್ಯಕ್ಷ ಜಿ.ಎಲ್.ನಿತ್ಯಾನಂದ ಮಾತನಾಡಿ, ಮಳೆಗಾಲದಲ್ಲಿ ಊರಿನ ರಸ್ತೆಗಳೆಲ್ಲ ಕೆಸರು ಗದ್ದೆಗಳಾಗುತ್ತವೆ. ಗ್ರಾಮವನ್ನು ದತ್ತು ತೆಗೆದುಕೊಳ್ಳುವ ಭರವಸೆ ನೀಡಿದ್ದ ಶಾಸಕರು ಈವರೆಗೆ ತಿರುಗಿಯೂ ನೋಡಿಲ್ಲ. 2021-22ನೇ ಸಾಲಿನ ಎಸ್‌ಸಿಪಿಟಿಎಸ್‌ಪಿ ಯೋಜನೆಯಡಿ ತಾಲ್ಲೂಕಿನ ಸುಮಾರು 60 ಹಳ್ಳಿಗಳ ಕಾಲೊನಿಗಳಲ್ಲಿ ಸಿ.ಸಿ ರಸ್ತೆ, ಚರಂಡಿ ಹಾಗೂ ಹಲವು ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಿ ಈಗಾಗಲೇ ಹಲವೆಡೆ ಕಾಮಗಾರಿ ನಡೆಸಲಾಗುತ್ತಿದೆ. ಆದರೆ ಗಜ್ಜರಹಳ್ಳಿ ಗ್ರಾಮದ ಮುಖ್ಯ ರಸ್ತೆ ಹಾಗೂ ಕಾಲೊನಿಗಳಲ್ಲಿ ಸಿ.ಸಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸಿದ್ದರೂ ಗ್ರಾಮವನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ರಾಜಪ್ಪ, ರಾಮಕೃಷ್ಣಪ್ಪ, ಗೋಪಾಲ ಕೃಷ್ಣ, ಚಂದ್ರೇಗೌಡ, ಜಿ.ಎಸ್.ರಂಗನಾಥ್, ಮಹೇಶ್, ನರಸಿಂಹಯ್ಯ, ನವೀನ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.