ADVERTISEMENT

ರಾಜ್ಯದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ ನಿಶ್ಚಿತ: ಬಿ.ವೈ ವಿಜಯೇಂದ್ರ

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಸಮಾವೇಶದಲ್ಲಿ ಬಿ.ವೈ ವಿಜಯೇಂದ್ರ‍ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2023, 15:50 IST
Last Updated 20 ಮಾರ್ಚ್ 2023, 15:50 IST
ರಾಯಚೂರಿನ ಯಾದವ್ ಕಲ್ಯಾಣ ಮಂಟಪದಲ್ಲಿ ಬಿಜೆಪಿಯಿಂದ  ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಯುವ ಮೋರ್ಚಾ ಸಮಾವೇಶದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿದರು.
ರಾಯಚೂರಿನ ಯಾದವ್ ಕಲ್ಯಾಣ ಮಂಟಪದಲ್ಲಿ ಬಿಜೆಪಿಯಿಂದ  ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಯುವ ಮೋರ್ಚಾ ಸಮಾವೇಶದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿದರು.   

ರಾಯಚೂರು: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಪುನಃ ಅಧಿಕಾರಕ್ಕೆ ಬರುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಹೇಳಿದರು.

ನಗರದ ಮಂತ್ರಾಲಯದ ಮಾರ್ಗದ ಯಾದವ್ ಕಲ್ಯಾಣ ಮಂಟಪದಲ್ಲಿ ಬಿಜೆಪಿಯಿಂದ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿವೆ. ಜೆಡಿಎಸ್ ಸದ್ಯಕ್ಕೆ ಅತಂತ್ರ ಸ್ಥಿತಿಯಲ್ಲಿದೆ. ರಾಜ್ಯ ಬಜೆಟ್ ಮಂಡನೆ ನಂತರ ಕಾಂಗ್ರೆಸ್ ನಾಯಕರು ಕಿವಿಗೆ ಹೂವು ಇಟ್ಟುಕೊಂಡು ಸರ್ಕಾರವನ್ನು ಅಣಕು ಮಾಡಿದ್ದಾರೆ. ಆದರೆ, ರಾಜ್ಯದ ಜನರೇ ಕಾಂಗ್ರೆಸ್‌ನವರಿಗೆ ಕಿವಿಗೆ ಹೂವು ಇಟ್ಟು ಕಳಿಸುತ್ತಾರೆ ಎಂದರು.

ADVERTISEMENT

ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಮಾಡಿರುವ ಅಭಿವೃದ್ಧಿಯನ್ನು ಜನರು ಬೆಂಬಲಿಸುತ್ತಿದ್ದಾರೆ. ದೇಶದಲ್ಲಿ 2014ರಿಂದ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ವಿರೋಧ ಪಕ್ಷಗಳು ಅನಾವಶ್ಯಕವಾಗಿ ಮೋದಿಯವರ ಬಗ್ಗೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ನರೇಂದ್ರ ಮೋದಿ ಅವರು ರೈತರ ಅನುಕೂಲಕ್ಕಾಗಿ ರಿಯಾಯ್ತಿ ದರದಲ್ಲಿ ರಸಗೊಬ್ಬರವನ್ನು ನೀಡುತ್ತಿದ್ದಾರೆ. ರಾಜ್ಯದಲ್ಲಿ 55 ಲಕ್ಷ ಮನೆಗಳಿಗೆ ಗಂಗಾ ಯೋಜನೆಯ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ರೂಪಿಸಿದ್ದಾರೆ ಎಂದರು.

ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಯಲ್ಲಿ ₹186 ಕೋಟಿ ಅನುದಾನದಲ್ಲಿ ಏತ ನೀರಾವರಿ ಅನುಷ್ಠಾನಗೊಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಯಚೂರು ನಗರಸಭೆಯನ್ನು ಮಹಾನಗರಪಾಲಿಕೆಯನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.

ದೇಶದಲ್ಲಿ 65 ವರ್ಷ ಅಧಿಕಾರ ನಡೆಸಿ ಕಾಂಗ್ರೆಸ್ ಪಕ್ಷದವರು ಯಾವುದೇ ಅಭಿವೃದ್ಧಿ ಮಾಡಿಲ್ಲ. ಅವರು ಕೇವಲ ಭಾಷಣಕ್ಕೆ ಸೀಮಿತವಾಗಿದ್ದಾರೆ. ಭ್ರಷ್ಟಾಚಾರ ರಹಿತ ಸರ್ಕಾರ ನೀಡಿದ ಕೀರ್ತಿ ಬಿಜೆಪಿ ಸರ್ಕಾರವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಪ್ರಜ್ಞಾವಂತ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದರು.

ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಈಗಾಗಲೇ ಜನರು ಬಿಜೆಪಿಯನ್ನು ಪುನಃ ಅಧಿಕಾರಕ್ಕೆ ತರಬೇಕೆಂದು ಸಿದ್ಧತೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಬಿ.ವೈ ವಿಜಯೇಂದ್ರ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕ್ರಪ್ಪ ಮಾತನಾಡಿದರು. ಮಾಜಿ ಶಾಸಕರಾದ ಎ.ಪಾಪಾರೆಡ್ಡಿ ಬಸನಗೌಡ ಬ್ಯಾಗವಾಟ್, ಗಂಗಾಧರ ನಾಯಕ, ನಗರಸಭೆ ಅಧ್ಯಕ್ಷೆ ಲಲಿತಾ ಆಂಜನೇಯ ಕಡಗೋಲ, ಜಿಲ್ಲಾಧ್ಯಕ್ಷ ರಮಾನಂದ ಯಾದವ್, ಮುಖಂಡರಾದ ಜೆ.ಶರಣಪ್ಪಗೌಡ, ತ್ರಿವಿಕ್ರಮ ಜೋಶಿ, ಆರ್‌ಡಿಎ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಬಿ.ಗೋವಿಂದ, ರವಿಂದ್ರ ಜಲ್ದಾರ್, ಕಡಗೋಲ ಆಂಜನೇಯ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.