ರಾಯಚೂರು: ಇಂಡಿ ವಿಲೇಜ್ ಫೌಂಡೇಶನ್ ವತಿಯಿಂದ ಜಿಲ್ಲಾಡಳಿತಕ್ಕೆ ದೇಣಿಗೆ ನೀಡಿಲಾದ ಮೂರು ವ್ಯಾಕ್ಸಿನೇಷನ್ ವಾಹನಕ್ಕೆ ಬುಧವಾರದಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಅವರಣದಲ್ಲಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್ ಅವರು ಹಸಿರುನಿಶಾನೆ ತೋರಿಸಿದರು.
ಆನಂತರ ಮಾತನಾಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಲಸಿಕಾ ಮಹಾಮೇಳ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಮೊದಲ ಡೋಸ್ ಶೇ 59ರಷ್ಟು, 2ನೇ ಡೋಸ್ ಶೇ 20ರಷ್ಟು ಮುಗಿದಿದ್ದು, ಅಕ್ಟೋಬರ್ 30ರೊಳಗೆ ಮೊದಲ ಡೋಸ್ ಶೇ 100 ರಷ್ಟು ಮಾಡಲಾಗುವುದು ಎಂದು ತಿಳಿಸಿದರು.
ಲಸಿಕಾ ಮಹಾ ಮೇಳಕ್ಕೆ ಇಂಡಿ ವಿಲೇಜ್ ಫೌಂಡೇಶನ್ ವತಿಯಿಂದ ಮೂರು ಸಂಚಾರಿ ಲಸಿಕಾ ವಾಹನಗಳನ್ನು ನೀಡಿದ್ದಾರೆ. ಈ ವಾಹನಗಳನ್ನು ಬಳಕೆ ಮಾಡಿಕೊಂಡು ಲಸಿಕೆ ಪ್ರಮಾಣ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆಯಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಮಾತನಾಡಿ, ಲಸಿಕೆ ನೀಡಲು ಸರ್ಕಾರ ಕೊಟ್ಟಿರುವ ಗುರಿಯನ್ನು ತಲುಪುತ್ತೇವೆ ಎಂಬ ನಂಬಿಕೆ ಇದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಕೆ.ನಾಗರಾಜ, ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ಸುರೇಂದ್ರ ಬಾಬು, ಕಾರ್ಯಕ್ರಮದ ಅನುಷ್ಠಾನ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ವಿಜಯ್ ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.