ADVERTISEMENT

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ದರೋಡೆ ಮಾಡಿದ್ದ ಐವರ ಸೆರೆ

ಮೈಸೂರು ವೈದ್ಯ ದಂಪತಿಯ ನಗದು, ಚಿನ್ನಾಭರಣ ದೋಚಿದ್ದ ಆರೋಪಿಗಳು

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 22:18 IST
Last Updated 21 ಮಾರ್ಚ್ 2023, 22:18 IST
   

ಚನ್ನಪಟ್ಟಣ: ತಾಲ್ಲೂಕಿನ ದೇವರಹೊಸಹಳ್ಳಿ ಹಾಗೂ ತಿಟ್ಟಮಾರನಹಳ್ಳಿ ನಡುವಿನ ಬೆಂಗಳೂರು ಮತ್ತು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕೆಟ್ಟು ನಿಂತಿದ್ದ ಕಾರಿನಲ್ಲಿದ್ದ ದಂಪತಿಯ ಚಿನ್ನಾಭರಣ ಹಾಗೂ ನಗದು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ನಗರದ ಸೈಯದ್ ವಾಡಿಯ ಅತಿಉಲ್ಲಾ (21), ತನ್ವೀರ್ (24), ಸಿದ್ದಿಕ್ ಅಹಮದ್ (26), ಮುಸ್ತಾಕ್ ಅಹಮದ್ (50), ಟಿಪ್ಪುನಗರದ ಪಸೀಉಲ್ಲಾ (20) ಬಂಧಿತರು. ಆರೋ ಪಿಗಳಿಂದ ಕೃತ್ಯಕ್ಕೆ ಬಳಸಿದ್ದ 2 ಬೈಕ್‌ಗಳು, ₹ 8 ಲಕ್ಷ ಮೌಲ್ಯದ 140 ಗ್ರಾಂ ಚಿನ್ನದ ಗಟ್ಟಿ ವಶಪಡಿಸಿಕೊಳ್ಳಲಾಗಿದೆ.

ಮೈಸೂರಿನ ವೈದ್ಯ ಡಾ.ಲೋಹಿತ್ ರಾವ್ ಹಾಗೂ ಅವರ ಪತ್ನಿ ಮಾರ್ಚ್‌ 8ರಂದು ಕಾರಿನಲ್ಲಿ ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಮಧ್ಯರಾತ್ರಿ ವಾಪಸ್ ಮೈಸೂರಿಗೆ ತೆರಳುತ್ತಿದ್ದಾಗ ತಾಲ್ಲೂಕಿನ ದೇವರಹೊಸಹಳ್ಳಿ ಹಾಗೂ ತಿಟ್ಟಮಾರನಹಳ್ಳಿ ನಡುವಿನ ಹೆದ್ದಾರಿಯಲ್ಲಿ ಕಾರು ತಾಂತ್ರಿಕ ದೋಷದಿಂದ ಕೆಟ್ಟು ನಿಂತಿತ್ತು. ಈ ವೇಳೆ ಬೈಕ್‌ನಲ್ಲಿ ಬಂದ ಆರೋಪಿಗಳು ದಂಪತಿಗೆ ಚಾಕು ತೋರಿಸಿ ಬೆದರಿಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನಾಭರಣ ಹಾಗೂ ₹ 8 ಸಾವಿರ ನಗದು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಲೋಹಿತ್ ರಾವ್ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಡಿವೈಎಸ್‌ಪಿ ಮೋಹನ್ ಕುಮಾರ್ ಅವರು ಗ್ರಾಮಾಂತರ ಸರ್ಕಲ್ ಇನ್‌ಸ್ಪೆಕ್ಟರ್ ಟಿ.ಟಿ. ಕೃಷ್ಣ ಹಾಗೂ ಸಬ್ ಇನ್‌ಸ್ಪೆಕ್ಟರ್ ಲಿಯಾಖತ್ ನೇತೃತ್ವದಲ್ಲಿ ತಂಡ ರಚಿಸಿದ್ದರು. ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಈ ಹಿಂದೆ ಚನ್ನಪಟ್ಟಣ ಹಾಗೂ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಹೆದ್ದಾರಿಯಲ್ಲಿ ಕೆಟ್ಟು ನಿಂತಿರುವ ವಾಹನಗಳು, ಬೈಕ್‌ನಲ್ಲಿ ಬರುವ ಹುಡುಗ, ಹುಡುಗಿಯರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ನಗದು, ಚಿನ್ನಾಭರಣ ದೋಚುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಂಡದ ಯಶಸ್ವಿ ಕಾರ್ಯಾಚರಣೆಗೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುರೇಶ್ ಪ್ರಶಂಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.