ಪಾವಗಡ: ಪಟ್ಟಣಕ್ಕೆ 5 ಕಿ.ಮೀ ದೂರದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ನಿಲಯ ನಿರ್ಮಿಸುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತದೆ ಎಂದು ಆರೋಪಿಸಿ ರೈತ ಸಂಘ, ಹಸಿರು ಸೇನೆಯ ಪದಾಧಿಕಾರಿಗಳು ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ಸಮುದಾಯದವರಿದ್ದಾರೆ. ಈ ಸಮುದಾಯದ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಪಟ್ಟಣದ ಶಾಲಾ, ಕಾಲೇಜುಗಳಿಗೆ ಸುಮಾರು 5 ಕಿ.ಮೀ ದೂರದಲ್ಲಿ ವಿದ್ಯಾರ್ಥಿ ನಿಲಯ ಕಟ್ಟುವುದರಿಂದ ದಿನಕ್ಕೆ ಎರಡು ಬಾರಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಓಡಾಡಬೇಕಾಗುತ್ತದೆ. ಇದು ಬಡ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತದೆ ಎಂದು ದೂರಿದರು.
ವಿದ್ಯಾರ್ಥಿಗಳಿಗೆ ದ್ವಿಚಕ್ರವಾಹನ ಕೊಡಿಸಲು ಪೋಷಕರಿಗೆ ಶಕ್ತಿ ಇರುವುದಿಲ್ಲ. ಹಾಗಾಗಿ ಕಾಲ್ನಡಿಗೆ, ಬಸ್, ಆಟೊ ಇತ್ಯಾದಿಗೆ ಹಣ ವ್ಯಯ ಮಾಡಿ ಓಡಾಡುವ ಅನಿವಾರ್ಯತೆ ಇರುತ್ತದೆ ಎಂದು
ಹೇಳಿದರು.
ದೂಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ, ಕಾರ್ಯದರ್ಶಿ ಶಿವರಾಜು, ಕೃಷ್ಣರಾವ್, ಕೃಷ್ಣಮೂರ್ತಿ, ಗಂಗಾಧರ ನಾಯ್ಡು, ಸಿ.ಕೆ. ತಿಪ್ಪೇಸ್ವಾಮಿ, ಹನುಮಂತರಾಯ, ಬಡಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.