ಉಡುಪಿ: ಎಎಸ್ಪಿ ಕುಮಾರಚಂದ್ರ ಅವರ ಪುತ್ರಿಯ ಮೆಹಂದಿ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೆ ಫೋಟೊಗೆ ಫೋಸ್ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾಗಿವೆ.
ಸರ್ಕಾರದ ನಿಯಮಗಳಿರುವುದು ಕೇವಲ ಸಾರ್ವಜನಿಕರಿಗೆ ಮಾತ್ರವೇ, ಜಿಲ್ಲಾಧಿಕಾರಿಗೆ, ಸರ್ಕಾರಿ ಅಧಿಕಾರಿಗಳಿಗೆ ಅನ್ವಯವಾಗುವುದಿಲ್ಲವೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.
ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ನಿಷೇಧಾಜ್ಞೆಯಂತಹ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ಇವೆಲ್ಲವನ್ನು ಅನುಷ್ಠಾನಕ್ಕೆ ತರಬೇಕಾದ ಜಿಲ್ಲಾಧಿಕಾರಿಯೇ ನಿಯಮ ಉಲ್ಲಂಘಿಸಿರುವುದು ಖಂಡನೀಯ ಎಂದು ಹಲವರು ಟೀಕಿಸಿದ್ದಾರೆ.
ಮದುವೆ ಹಾಗೂ ಇತರೆ ಶುಭ ಸಮಾರಂಭಗಳಿಗೆ 50 ಮಂದಿ ಮಾತ್ರ ಸೇರಲು ಅನುಮತಿ ಎಂಬ ನಿಯಮ ಪಾಲನೆ ಆಗಿದೆಯೇ ಎಂದು ಹಲವರು ಪ್ರಶ್ನಿಸಿದ್ದಾರೆ.
ಈಚೆಗೆ ಉಡುಪಿ ಜಿಲ್ಲಾಧಿಕಾರಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಬಸ್ಗಳ ವಿರುದ್ಧ ಈಚೆಗೆ ಕಾರ್ಯಾಚರಣೆ ನಡೆಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಬಸ್ನಲ್ಲಿ ನಿಂತು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರನ್ನು ಬಸ್ನಿಂದ ಕೆಳಗಿಸಿದ್ದರು. ಬಸ್ನಿಂದ ಇಳಿಸಿದರೆ ಮನೆ ತಲುಪುವುದು ತಡವಾಗುತ್ತದೆ ಎಂದು ವಿದ್ಯಾರ್ಥಿನಿ ಬೇಸರ ವ್ಯಕ್ತಪಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿತ್ತು. ಹಲವರು ಜಿಲ್ಲಾಧಿಕಾರಿ ನಡೆಯನ್ನು ಟೀಕಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.