ADVERTISEMENT

ಕಸ ಸಾಗಣೆ ವಾಹನ ಚಾಲಕರ ಧರಣಿ ಆರಂಭ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2023, 11:41 IST
Last Updated 20 ಮಾರ್ಚ್ 2023, 11:41 IST
ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಹಾಗೂ ಸಹಾಯಕರ ಸಂಘದವರು (ಎಐಸಿಸಿಟಿಯು ಸಂಯೋಜಿತ) ಹೊಸಪೇಟೆಯಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು
ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಹಾಗೂ ಸಹಾಯಕರ ಸಂಘದವರು (ಎಐಸಿಸಿಟಿಯು ಸಂಯೋಜಿತ) ಹೊಸಪೇಟೆಯಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಹೊಸಪೇಟೆ (ವಿಜಯನಗರ): ಕೆಲಸ ಕಾಯಂಗೊಳಿಸಲು ಆಗ್ರಹಿಸಿ ನಗರಸಭೆಯ ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಹಾಗೂ ಸಹಾಯಕರ ಸಂಘದವರು (ಎಐಸಿಸಿಟಿಯು ಸಂಯೋಜಿತ) ನಗರದಲ್ಲಿ ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಬೆಳಿಗ್ಗೆ ಕೆಲಸ ಬಹಿಷ್ಕರಿಸಿದ ಚಾಲಕರು ನಗರಸಭೆ ಕಚೇರಿ ಎದುರು ಧರಣಿ ನಡೆಸಿದರು. ಅನಂತರ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್‍ಯಾಲಿ ನಡೆಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರ ಸಲ್ಲಿಸಿದರು.

ಚಾಲಕರು ಕೆಲಸ ಬಹಿಷ್ಕರಿಸಿ ಧರಣಿ ನಡೆಸಿದ ಪರಿಣಾಮ ನಗರದ ಯಾವ ಬಡಾವಣೆಯಲ್ಲಿ ಕಸ ಸಂಗ್ರಹಣೆ ವಾಹನಗಳು ಓಡಾಡಲಿಲ್ಲ. ಮನೆ, ಹೋಟೆಲ್‌, ವಾಣಿಜ್ಯ ಮಳಿಗೆಗಳವರು ಅವರ ಬಳಿ ಸಂಗ್ರಹವಾದ ತ್ಯಾಜ್ಯವನ್ನು ತಮ್ಮಲ್ಲಿಯೇ ಇಟ್ಟುಕೊಳ್ಳುವಂತಾಯಿತು.

ADVERTISEMENT

ನಗರಸಭೆಯಲ್ಲಿ 47 ಕಸ ಸಾಗಣೆ ವಾಹನಗಳಿವೆ. 67 ಜನ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಎಲ್ಲರೂ ಕೆಲಸ ಬಹಿಷ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಎರಡು ವರ್ಷ ನಿರಂತರ ಕೆಲಸ ಮಾಡಿದವರನ್ನು ಕಾಯಂಗೊಳಿಸಲಾಗುವುದು ಎಂದು ಸರ್ಕಾರವೇ ಭರವಸೆ ನೀಡಿತ್ತು. ಆರು ವರ್ಷಗಳಿಂದ ಕಡಿಮೆ ವೇತನದಲ್ಲಿ ಕೆಲಸ ಮಾಡುತ್ತಿದ್ದೇವೆ. ಹಲವು ಸಲ ಮನವಿ ಸಲ್ಲಿಸಿದರೂ ಸರ್ಕಾರ ಕಿವಿಗೊಟ್ಟಿಲ್ಲ. ಹಾಗಾಗಿ ಬೇಡಿಕೆ ಈಡೇರಿಸುವವರೆಗೆ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ನಡೆಸಲು ತೀರ್ಮಾನಿಸಲಾಗಿದೆ’ ಎಂದು ಸಂಘದ ಜಿಲ್ಲಾಧ್ಯಕ್ಷ ಗೋಪಾಲ್‌ ತಿಳಿಸಿದರು.

ಸಂಘದ ಉಪಾಧ್ಯಕ್ಷ ಎಚ್‌. ಗಂಗಾಧರ, ಕಾರ್ಯದರ್ಶಿ ಕೆ. ರಮೇಶ, ಪೆನ್ನಯ್ಯಾ, ಹೊನ್ನೂರು, ಶ್ರೀನಿವಾಸ್‌ ಸೇರಿದಂತೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.