ಶಹಾಪುರ: ಕೊರೊನಾ ಸೋಂಕು ಹಬ್ಬುತ್ತಿರುವುದರಿಂದ ಜೀವ ಕೈಯಲ್ಲಿ ಹಿಡಿದುಕೊಂಡು ಸಾಗುವಂತೆ ಸ್ಥಿತಿ ನಿರ್ಮಾಣವಾಗಿದೆ. ನಾವೆಲ್ಲರೂ ಸದಾ ಜಾಗೃತರಾಗಿರಬೇಕು. ಧೈರ್ಯವನ್ನು ಕಳೆದುಕೊಳ್ಳಬಾರದು. ಕಷ್ಟದ ಸಮಯವನ್ನು ಒಗ್ಗೂಡಿ ಜಯಿಸೋಣ. ನಿಮ್ಮ ಸಂಕಷ್ಟದ ಜೊತೆ ನಾನು ಸದಾ ಕೈಜೋಡಿಸುವೆ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ತಿಳಿಸಿದರು.
ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಥಾಪಿಸಿರುವ ಕೋವಿಡ್ ನಿರ್ವಹಣಾ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದರು.
ಕೋವಿಡ್ ಕೇಂದ್ರದಲ್ಲಿ 65 ಹಾಸಿಗೆಯ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ 5 ವೆಂಟಿಲೇಟರ್ ಕಾರ್ಯನಿರ್ವಹಿಸುತ್ತಿವೆ. ಇನ್ನೂ ಐದು ಶೀಘ್ರದಲ್ಲಿ ಕಾರ್ಯನಿರ್ವಹಿಸುವ ವಿಶ್ವಾಸವಿದೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಔಷಧಿ, ಆಮ್ಲಜನಕ, ರೆಮ್ಡಿಸಿವಿರ್ ಕೊರತೆಯಿಲ್ಲ. ಅಲ್ಲದೆ ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದ ವಸತಿಗೃಹದಲ್ಲಿ 64 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ 24 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ರಮೇಶ ಗುತ್ತೆದಾರ ಮಾಹಿತಿ ನೀಡಿದರು.
ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಮಲ್ಲಪ್ಪ ಕಣಜಿಗಿಕರ್ ಮಾಹಿತಿ ನೀಡಿ, ನಮ್ಮ ಕೇಂದ್ರದಿಂದ 200 ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಅದರಲ್ಲಿ 131 ಜನರಿಗೆ ಆಮ್ಲಜನಕದ ವ್ಯವಸ್ಥೆ ಮಾಡಲಾಗಿದೆ. 50 ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ. 13 ಜನ ನಿಧನರಾಗಿದ್ದಾರೆ. ಇಬ್ಬರು ಚಿಕಿತ್ಸೆ ತೆಗೆದುಕೊಳ್ಳದೆ ವಾಪಸ್ಸು ಹೋಗಿದ್ದಾರೆ ಎಂದರು.
ನಂತರ ಮಾತನಾಡಿದ ಶಾಸಕ ಶರಣಬಸಪ್ಪ ದರ್ಶನಾಪುರ, ಯಾರೂ ಭಯ ಭೀತರಾಗಬೇಡಿ. ದೋರನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ವ್ಯವಸ್ಥೆ ಇರುವ 18 ಹಾಸಿಗೆ ವ್ಯವಸ್ಥೆ. ವಡಗೇರಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೂ ಆಮ್ಲಜನಕ ವ್ಯವಸ್ಥೆ ಮಾಡಲಾಗುತ್ತಿದೆ. ಕೆಂಭಾವಿ ಪ್ರಾಥಮಿಕ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆಯಿಂದ ತುಸು ವಿಳಂಬವಾಗುತ್ತಲಿದೆ ಎಂದರು.
ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ್ ಹುಲಕಲ್, ನಗರ ಆಶ್ರಯ ಸಮಿತಿ ಅಧ್ಯಕ್ಷ ವಸಂತ ಸುರಪುರಕರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.