ಹೈದರಾಬಾದ್: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ನಟ ಹಾಗೂ ಮೆಗಾಸ್ಟಾರ್ ಚಿರಂಜೀವಿ ಅವರ ಅಳಿಯ ಸಾಯಿ ಧರ್ಮ ತೇಜ್ ಅವರಿಗೆ ಹೈದರಾಬಾದ್ ಜುಬಿಲಿ ಹಿಲ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹೈದರಾಬಾದ್ನ ಮಾಧಾಪುರ್ ಕೇಬಲ್ ಸೇತುವೆಯ ಮೇಲೆ ಸಾಯಿ ಧರ್ಮ ತೇಜ್ ಅವರು ಶುಕ್ರವಾರ ರಾತ್ರಿ ಕ್ರೀಡಾ ಬೈಕ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿತ್ತು.
‘ತೇಜ್ ಅವರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಅವರ ಪ್ರಮುಖ ಅಂಗಾಂಗಗಳು ಸ್ಥಿರವಾಗಿದ್ದು ಉತ್ತಮವಾಗಿ ಕೆಲಸ ಮಾಡುತ್ತಿವೆ. ಮುಂದಿನ ಹೆಲ್ತ್ ಬುಲಿಟಿನ್ನ್ನು ನಾಳೆ ಬಿಡುಗಡೆ ಮಾಡುತ್ತೇವೆ‘ ಎಂದು ವೈದ್ಯರು ತಿಳಿಸಿದ್ದಾರೆ.
'ವೇಗವಾಗಿ ಚಲಿಸುತ್ತಿದ್ದ ಬೈಕ್ ಸ್ಕಿಡ್ ಆಗಿದ್ದರಿಂದ ಈ ಅಪಘಾತ ಸಂಭವಿಸಿದೆ. ಸಾಯಿ ಧರ್ಮ ತೇಜ್ ಅವರು ಹೆಲ್ಮೆಟ್ ಧರಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಪಘಾತ ಪ್ರಕರಣ ದಾಖಲಿಸಲಾಗಿದೆ' ಎಂದು ಪೊಲೀಸರು ಹೇಳಿದ್ದಾರೆ.
ಜುಬಿಲಿ ಹಿಲ್ಸ್ನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಯಿ ಧರ್ಮ ತೇಜ್ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಚಿರಂಜೀವಿ ಕುಟುಂಬದ ಸದಸ್ಯರಾಗಿರುವ ಸಾಯಿ ಧರ್ಮ ತೇಜ್ ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಲು ಚಿರಂಜೀವಿ, ಪವನ್ಕಲ್ಯಾಣ್, ವರುಣ್ ತೇಜ್ ಸೇರಿದಂತೆ ಹಲವರು ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಪಿಲ್ಲಾ ನ್ನುವು ಲೇನು ಜೀವಿತಂ ತೆಲಗು ಸಿನಿಮಾ ಮೂಲಕ ಚಿತ್ರರಂಗ ಪಾದಾರ್ಪಣೆ ಮಾಡಿದ್ದ ತೇಜ್, 13 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಅವರು ರಿಪಬ್ಲಿಕ್ ಎಂಬ ಸಿನಿಮಾಕ್ಕೆ ಬಣ್ಣ ಹಚ್ಚಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.