ನವದೆಹಲಿ: ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಉಷ್ಣಾಂಶ 45 ಡಿಗ್ರಿ ದಾಟಿದ್ದು, ಮುಂದಿನ ಎರಡು ದಿನ ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಡ ಮತ್ತು ರಾಜಸ್ತಾನದಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
‘ಇನ್ನೂ ಉತ್ತರ ಪ್ರದೇಶದ ಈಶಾನ್ಯ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಉಷ್ಣಾಂಶ 47 ಡಿಗ್ರಿ ದಾಟಲಿದೆ. ಈ ಬಾರಿಯ ಬೇಸಿಗೆಯಲ್ಲಿ ಇದೇ ಮೊದಲ ಬಾರಿಗೆ ಉಷ್ಣಾಂಶ ಏರಿಕೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ,’ ಎಂದು ಐಎಂಡಿಯ ಪ್ರಾದೇಶಿಕ ಹವಾಮಾನ ಇಲಾಖೆಯ ಮುಖ್ಯಸ್ಥ ಕುಲ್ದೀಪ್ ಶ್ರೀವಾಸ್ತವ್ ತಿಳಿಸಿದ್ದಾರೆ.
‘ಈ ಬಾರಿ ಉತ್ತರ ಭಾರತದಲ್ಲಿ ಏಪ್ರಿಲ್ ತಿಂಗಳಲ್ಲಿ ಮಳೆಯಾದ ಕಾರಣ ತಾಪಮಾನ ಸಾಮಾನ್ಯವಾಗಿತ್ತು. ಆದರೆ ಶನಿವಾರ ರಾಜಸ್ತಾನದ ಪಿಲಣಿಯಲ್ಲಿ 46.7 ಡಿಗ್ರಿ ಉಷ್ಣಾಂಶ ದಾಖಲಾಗಿದೆ,’ ಎಂದು ಅವರು ಹೇಳಿದರು.
ಚತ್ತೀಸಗಡ, ಒಡಿಶಾ, ಗುಜರಾತ್, ಮಧ್ಯ ಮಹಾರಾಷ್ಟ್ರ ಮತ್ತು ವಿದರ್ಭ, ಆಂಧ್ರಪ್ರದೇಶದ ಕರಾವಳಿ ಭಾಗ, ಯಾಣ, ರಾಯಲಸೀಮಾ ಮತ್ತು ಕರ್ನಾಟಕದ ಉತ್ತರ ಒಳನಾಡು ಪ್ರದೇಶಗಳ ಅಲ್ಲಲ್ಲಿ ಮುಂದಿನ 3–4 ದಿನಗಳಲ್ಲಿ ಬಿಸಿಗಾಳಿಯ ಬೀಸಲಿದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.