ADVERTISEMENT

Fact Check | ಮೀಸಲಾತಿಯನ್ನು ರದ್ದುಪಡಿಸಬೇಕು ಎಂದು ಅಂಬೇಡ್ಕರ್ ಹೇಳಿದ್ದರೆ?

ಪ್ರಜಾವಾಣಿ ವಿಶೇಷ
Published 31 ಜುಲೈ 2022, 21:00 IST
Last Updated 31 ಜುಲೈ 2022, 21:00 IST
   

ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿ ಹುದ್ದೆಗೆ ಏರಿದ ದಿನ, ಮೀಸಲಾತಿಯನ್ನು ರದ್ದುಪಡಿಸಬೇಕು ಎಂದು ಅಂಬೇಡ್ಕರ್ ಹೇಳಿದ್ದರೆ?

‘ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿ ಹುದ್ದೆಗೆ ಏರಿದ ದಿನ, ಮೀಸಲಾತಿಯನ್ನು ರದ್ದುಪಡಿಸಬೇಕು’ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ್ದರು. ಇದನ್ನು ಈಗ ವಿನಯವಾಗಿ ನೆನಪಿಸುತ್ತಿದ್ದೇವೆ’ ಎಂಬ ಪೋಸ್ಟರ್‌ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಂಚಿಕೆಯಾಗುತ್ತಿದೆ. ಈ ಬರಹ ಇರುವ ಪೋಸ್ಟರ್‌ನಲ್ಲಿ ಅಂಬೇಡ್ಕರ್ ಅವರ ಚಿತ್ರವೂ ಇದೆ. ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಆದ ನಂತರ, ಈ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಇದು ಸುಳ್ಳು ಸುದ್ದಿ ಎಂದು ಆಲ್ಟ್‌ ನ್ಯೂಸ್‌, ದಿ ಕ್ವಿಂಟ್‌, ಫ್ಯಾಕ್ಟ್ಲಿ ಫ್ಯಾಕ್ಟ್‌ಚೆಕ್ ಪ್ರಕಟಿಸಿವೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಈ ರೀತಿ ಹೇಳಿದ್ದಾರೆ ಎಂಬುದಕ್ಕೆ ಎಲ್ಲಿಯೂ ಪುರಾವೆಗಳು ಇಲ್ಲ. ಅಂಬೇಡ್ಕರ್ ಅವರ ಸಂಪೂರ್ಣ ಬರಹ, ಭಾಷಣ, ಉಪನ್ಯಾಸ ಮತ್ತು ಸಂಸತ್ತಿನಲ್ಲಿ ಮಾಡಿದ ಭಾಷಣಗಳ ಸಂಗ್ರಹದ 22 ಸಂಪುಟಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಕಟಿಸಿದೆ. ಅವುಗಳಲ್ಲಿಯೂ ಇಂತಹ ಹೇಳಿಕೆ ಇಲ್ಲ. ಈ ಸಂಪುಟಗಳ ರಚನೆಯಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ಹರಿ ನರ್ಕೆ ಅವರು ಸಹ ಈ ಮಾತನ್ನೇ ಹೇಳಿದ್ದಾರೆ. ಇದು ಸುಳ್ಳುಸುದ್ದಿ ಎಂದು ಮೂರೂ ವೇದಿಕೆಗಳು ತಮ್ಮ ಫ್ಯಾಕ್ಟ್‌ಚೆಕ್‌ನಲ್ಲಿ ವಿವರಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT