ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ಹಮ್ಮಿಕೊಂಡಿರುವ ‘ಭಾರತವನ್ನು ಒಗ್ಗೂಡಿಸಿ’ ಪಾದಯಾತ್ರೆ ವಿರುದ್ಧ ಬಿಜೆಪಿ ಟೀಕೆ ಮಾಡಿದೆ. ‘ಸೆ.7ರಂದು ಕನ್ಯಾಕುಮಾರಿಯಲ್ಲಿ ಯಾತ್ರೆ ಆರಂಭವಾಯಿತು. ಆದರೆ ರಾಹುಲ್ ಗಾಂಧಿ ಅವರು ಅಲ್ಲಿನ ಸ್ವಾಮಿ ವಿವೇಕಾನಂದ ಸ್ಮಾರಕಕ್ಕೆ ಭೇಟಿ ನೀಡಿಲ್ಲ. ಏಕೆಂದರೆ ವಿವೇಕಾನಂದ ಅವರು ನೆಹರೂ ಕುಟುಂಬಕ್ಕೆ ಸೇರಿಲ್ಲ’ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ದೊಡ್ಡಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಸಮಾವೇಶದಲ್ಲಿ ಆರೋಪ ಮಾಡಿದ್ದರು. ಈ ವಿಡಿಯೊ ವೈರಲ್ ಆಗಿತ್ತು.
ಸ್ಮೃತಿ ಇರಾನಿ ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಲಾಜಿಕಲ್ ಇಂಡಿಯನ್ ಫ್ಯಾಕ್ಟ್ಚೆಕ್ ಪ್ರಕಟಿಸಿದೆ. ಯಾತ್ರೆ ಆರಂಭವಾದ ದಿನ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಲ್ಲಿ ವಿವೇಕಾನಂದ ಸ್ಮಾರಕಕ್ಕೆ ನಮಿಸಿದ್ದಾರೆ ಎಂದು ತಿಳಿಸಿದೆ. ಸ್ಮೃತಿ ಇರಾನಿ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ರಾಹುಲ್ ಗಾಂಧಿ ಅವರು ಸ್ಮಾರಕಕ್ಕೆ ಭೇಟಿ ನೀಡಿರುವ ವಿಡಿಯೊವನ್ನು ಟ್ವಿಟರ್ನಲ್ಲಿ ಪ್ರಕಟಿಸಿದೆ. ಹಲವು ಕಾಂಗ್ರೆಸ್ ಮುಖಂಡರು ಈ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ಧಾರೆ. ಸುಳ್ಳು ಸುದ್ದಿ ಹರಡುತ್ತಿರುವಬಿಜೆಪಿ ವಿರುದ್ಧ ಮುಖಂಡರು ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.