ADVERTISEMENT

Fact Check: ಪೆಗಾಸಸ್ ಪ್ರಕರಣದ ತನಿಖೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲವೇ?

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2022, 19:30 IST
Last Updated 30 ಆಗಸ್ಟ್ 2022, 19:30 IST
   

‘ಪೆಗಾಸಸ್ ಗೂಢಚರ್ಯೆ ಪ್ರಕರಣದ ತನಿಖೆಯಲ್ಲಿ ಕೇಂದ್ರ ಸರ್ಕಾರವು ಸಹಕಾರ ನೀಡುತ್ತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿಲ್ಲ. ಬದಲಿಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮುಂದೆ ತೋರಿದ್ದ ನಿಲುವನ್ನೇ, ಸರ್ಕಾರವು ತಾಂತ್ರಿಕ ಸಮಿತಿಯ ಮುಂದೆಯೂ ತೋರಿದೆ ಎಂದಷ್ಟೇ ಹೇಳಿದೆ. ಎಲ್ಲರೂ ಆದೇಶ ಪತ್ರವನ್ನು ಓದಿ’ ಎಂದು ಬಿಜೆಪಿ ಮಾಧ್ಯಮ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ ಅನ್ನು ಬಿಜೆಪಿಯ ಹಲವು ಕಾರ್ಯಕರ್ತರು ರಿಟ್ವೀಟ್ ಮಾಡಿದ್ದಾರೆ.

‘ಇದು ತಿರುಚಲಾದ ಮಾಹಿತಿ’ ಎಂದು ಆಲ್ಟ್‌ ನ್ಯೂಸ್‌ ಫ್ಯಾಕ್ಟ್‌ಚೆಕ್ ಪ್ರಕಟಿಸಿದೆ. ‘ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಆದೇಶದಲ್ಲಿ, ಸರ್ಕಾರವು ತನಿಖೆಗೆ ಸಹಕಾರ ನೀಡದೇ ಇರುವ ಬಗ್ಗೆ ಯಾವುದೇ ಉಲ್ಲೇಖ ಇಲ್ಲ. ಸುಪ್ರೀಂ ಕೋರ್ಟ್‌ನ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಲಾಗಿರುವ ಆದೇಶ ಪತ್ರದಲ್ಲಿ ಈ ಬಗ್ಗೆ ಉಲ್ಲೇಖ ಇಲ್ಲ. ಆದರೆ, ವಿಚಾರಣೆಯ ವೇಳೆ ಅಂದಿನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು, ‘ವಿಚಾರಣೆಯಲ್ಲಿ ಕೇಂದ್ರ ಸರ್ಕಾರವು ಯಾವುದೇ ಸಹಕಾರ ನೀಡಿಲ್ಲ ಎಂದು ತಾಂತ್ರಿಕ ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ’ ಎಂದು ಹೇಳಿದ್ದರು. ಹಲವು ಮಾಧ್ಯಮ ಸಂಸ್ಥೆಗಳೂ ಇದೇ ರೀತಿ ವರದಿ ಮಾಡಿವೆ. ಸುದ್ದಿ ಸಂಸ್ಥೆಗಳು ಇದನ್ನು ವರದಿ ಮಾಡಿವೆ. ಹೀಗಾಗಿ ಅಮಿತ್ ಮಾಳವೀಯ ಅವರ ಟ್ವೀಟ್‌ ದಾರಿ ತ‍ಪ್ಪಿಸುವಂತಿದೆ’ ಎಂದು ಫ್ಯಾಕ್ಟ್‌ಚೆಕ್‌ನಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT