ಕೋಲ್ಕತ್ತ: ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಬಳಿ ಪ್ರಚಾರ ನಡೆಸದಂತೆ ಪೊಲೀಸರು ನಮ್ಮನ್ನು ತಡೆದಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಮಮತಾ ಅವರ ನಿವಾಸಕ್ಕೆ ತೆರಳುವ ಹರೀಶ್ ಚಟರ್ಜಿ ರಸ್ತೆಯಲ್ಲಿ ಚುನಾವಣಾ ಪ್ರಚಾರ ನಡೆಸಲು ತೆರಳಿದಾಗ ಪೊಲೀಸರು ನಮ್ಮನ್ನು ತಡೆದಿದ್ದಾರೆ ಎಂದು ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಹೇಳಿದ್ದಾರೆ.
ಸೆಪ್ಟೆಂಬರ್ 30ರ ಉಪ ಚುನಾವಣೆಯಲ್ಲಿ ಟಿಎಂಸಿಗೆ ಸೋಲುವ ಭೀತಿ ಇದೆ. ಹೀಗಾಗಿ ಬಿಜೆಪಿ ನಾಯಕರು ಪ್ರಚಾರ ಮಾಡದಂತೆ ಪೊಲೀಸರು ತಡೆಯುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
ಈ ಆರೋಪವನ್ನು ಡಿಸಿಪಿ ಆಕಾಶ್ ಮಘಾರಿಯಾ ನಿರಾಕರಿಸಿದ್ದಾರೆ. ಪ್ರಚಾರಕ್ಕೆ ಬಂದವರ ಬಳಿ ಲಸಿಕೆ ಪ್ರಮಾಣ ಪತ್ರ ಇರಲಿಲ್ಲ. ಅವರು ಉನ್ನತ ಭದ್ರತಾ ವಲಯವನ್ನು ಉಲ್ಲಂಘಿಸಲು ಪ್ರಯತ್ನಿಸುತ್ತಿದ್ದರು. ಹೀಗಾಗಿ ಅವರನ್ನು ಆ ರಸ್ತೆಯಿಂದ ಬೇರೆಡೆಗೆ ಕಳುಹಿಸಲಾಯಿತು ಎಂದು ಡಿಸಿಪಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.