ADVERTISEMENT

ಗಣೇಶ ಚತುರ್ಥಿಗೆ ಸಾರ್ವಜನಿಕ ಹಣ ಬಳಕೆ: ಎಎಪಿ ಮಾನ್ಯತೆ ರದ್ದು ಕೋರಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 10:57 IST
Last Updated 20 ಸೆಪ್ಟೆಂಬರ್ 2021, 10:57 IST
ದೆಹಲಿ ಹೈಕೋರ್ಟ್‌
ದೆಹಲಿ ಹೈಕೋರ್ಟ್‌   

ನವದೆಹಲಿ (ಪಿಟಿಐ): ಜಾತ್ಯತೀತ ದೇಶದ ಸಂವಿಧಾನಕ್ಕೆ ವಿರುದ್ಧವಾಗಿ ಸಾರ್ವಜನಿಕರ ಹಣದಿಂದ ಗಣೇಶ ಚತುರ್ಥಿ ಪ್ರಚಾರ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್ಪಟೇಲ್ ಮತ್ತು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರಿದ್ದ ಪೀಠವು ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಈ ಸಂಬಂಧ ನೋಟಿಸ್ ನೀಡಲಾಗುತ್ತಿದೆಯೇ ಹೊರತು ದೆಹಲಿ ಮುಖ್ಯಮಂತ್ರಿ ಮತ್ತು ರಾಜ್ಯದ ಇತರ ಸಚಿವರಿಗೆ ಅಲ್ಲ ಎಂದು ಸ್ಪಷ್ಟಪಡಿಸಿದೆ.

ಸರ್ಕಾರಗಳು ಮತ್ತು ಚುನಾವಣಾ ಆಯೋಗದ ಪರ ವಕೀಲರು ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದ್ದರಿಂದ ನವೆಂಬರ್‌ 8ಕ್ಕೆ ಮುಂದಿನ ವಿಚಾರಣೆಯನ್ನು ಪೀಠ ನಿಗದಿಪಡಿಸಿತು.

ADVERTISEMENT

ಅರ್ಜಿದಾರ ಮತ್ತು ವಕೀಲ ಎಂ.ಎಲ್‌ಶರ್ಮಾ ರಾಜಕೀಯ ಪಕ್ಷವಾಗಿ ಆಮ್‌ ಆದ್ಮಿ ಪಕ್ಷದ ಮಾನ್ಯತೆಯನ್ನು ರದ್ದುಪಡಿಸಬೇಕು. ಸಂವಿಧಾನ ಹಾಗೂ ಜನಪ್ರತಿನಿಧಿ ಕಾಯ್ದೆ ಉಲ್ಲಂಘಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ಅವರ ಸಂಪುಟದ ಇತರ ಸಚಿವರನ್ನು ವಜಾಗೊಳಿಸಬೇಕು ಎಂದು ಕೋರಿದ್ದಾರೆ.

ದೆಹಲಿ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ರಾಹುಲ್‌ ಮೆಹ್ರಾ ಅರ್ಜಿಯನ್ನು ವಿರೋಧಿಸಿದ್ದು, ಸಾರ್ವಜನಿಕ ಹಿತಾಸಕ್ತಿಯ ಅರ್ಜಿ (ಪಿಐಎಲ್) ಎಂದು ಬಣ್ಣಿಸಿರುವ ಇದು ಸಂಪೂರ್ಣ ಪ್ರಚೋದಿತ ಮತ್ತು ಕುಚೋದ್ಯದ ಅರ್ಜಿಯಾಗಿದೆ. ಭಾರಿ ಮೊತ್ತದ ದಂಡ ವಿಧಿಸುವ ಜತೆಗೆ ಈ ಅರ್ಜಿ ವಜಾಗೊಳಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.