ನವದೆಹಲಿ: ವಾಯುಮಾಲಿನ್ಯವನ್ನು ನಿಯಂತ್ರಿಸಲು ರೂಪಿಸಿರುವ ಕ್ರಿಯಾಯೋಜನೆಯ ವಿವರಗಳನ್ನು ಅಕ್ಟೋಬರ್ 10ರೊಳಗೆ ಸಲ್ಲಿಸಬೇಕು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸೂಚಿಸಿದೆ.
ರಾಷ್ಟ್ರೀಯ ಸ್ವಚ್ಛ ವಾಯು ಕಾರ್ಯಕ್ರಮವು (ಎನ್ಸಿಎಪಿ) ಎಲ್ಲ ನಗರಗಳಿಗೂ ಅನ್ವಯವಾಗಲಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು, ವಾಯುಮಾಲಿನ್ಯ ಪ್ರಮಾಣ ಏರಿಕೆ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಸೂಚಿಸಿತು.
ವಾಯು ಗುಣಮಟ್ಟವನ್ನು ಪರಿಣಾಮಕಾರಿಯಾಗಿ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರವು 2018ರಲ್ಲಿ ರಾಷ್ಟ್ರೀಯ ಸ್ವಚ್ಛ ವಾಯು ಕಾರ್ಯಕ್ರಮ (ಎನ್ಸಿಎಪಿ) ಅನ್ನು ಪ್ರಕಟಿಸಿತ್ತು. ಅದರ ಪ್ರಕಾರ, ಮಾಲಿನ್ಯ ಪ್ರಮಾಣ ಹೆಚ್ಚಿದೆ ಎಂದು ಗುರುತಿಸಲಾದ 132 ನಗರಗಳಲ್ಲಿ ಮಾಲಿನ್ಯ ನಿಯಂತ್ರಿಸಲು ಮಂಡಳಿಗಳು ಅಗತ್ಯ ಕ್ರಮವನ್ನು ವಹಿಸಬೇಕಾಗಿದೆ.
ಇದಕ್ಕೂ ಮೊದಲು ಕೋವಿಡ್ ಕಾರಣ ನೀಡಿದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯ ಕ್ರಿಯಾ ಯೋಜನೆಗಾಗಿ ಮಾರ್ಗಸೂಚಿ ರೂಪಿಸಲು ಎರಡು ತಿಂಗಳ ಕಾಲಾವಕಾಶವನ್ನು ಕೋರಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.