ADVERTISEMENT

ಸತ್ಯವೇ ನನ್ನ ದೇವರು... ತೀರ್ಪಿನ ಬಳಿಕ ಗಾಂಧಿ ಹೇಳಿಕೆ ಉಲ್ಲೇಖಿಸಿದ ರಾಹುಲ್

ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಹೇಳಿಕೆ ಉಲ್ಲೇಖಿಸಿದ ರಾಹುಲ್‌ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಮಾರ್ಚ್ 2023, 9:45 IST
Last Updated 23 ಮಾರ್ಚ್ 2023, 9:45 IST
   

ನವದೆಹಲಿ: ‘ಎಲ್ಲಾ ಕಳ್ಳರ ಉಪನಾಮ ಮೋದಿ ಎಂದು ಯಾಕೆ ಇರುತ್ತದೆ‘ ಎಂದು ಪ್ರಶ್ನಿಸಿದ್ದಕ್ಕೆ ಸೂರತ್‌ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಹೇಳಿಕೆಯನ್ನು ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ನನ್ನ ಧರ್ಮವು ಸತ್ಯ ಹಾಗೂ ಅಹಿಂಸೆಯಾಗಿದೆ. ಸತ್ಯವೇ ನನ್ನ ದೇವರು. ಅದನ್ನು ಪಡೆಯಲು ಅಹಿಂಸೆಯೇ ಮಾರ್ಗ‘ ಎನ್ನುವ ಮಹಾತ್ಮಾ ಗಾಂಧಿ ಅವರ ಹೇಳಿಕೆಯನ್ನು ಟ್ವೀಟ್‌ ಮಾಡಿದ್ದಾರೆ.

‌ಸೂರತ್‌ ಕೋರ್ಟ್‌ನ ತೀರ್ಪಿನ ಬಳಿಕ ಅವರು ಈ ಟ್ವೀಟ್ ಮಾಡಿದ್ದಾರೆ.

ADVERTISEMENT

2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದ ರ‍್ಯಾಲಿಯಲ್ಲಿ ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ’ ಎಂದು ರಾಹುಲ್‌ ವ್ಯಂಗ್ಯವಾಡಿದ್ದರು. ಈ ಸಂಬಂಧ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ಸೂರತ್ ನ್ಯಾಯಾಲಯ ರಾಹುಲ್‌ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

‌ನಾಲ್ಕು ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡೂ ಕಡೆಯವರ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಎಚ್‌ಎಚ್ ವರ್ಮಾ, ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಬಳಿಕ ಜಾಮೀನು ಮಂಜೂರು ಮಾಡಿ, 30 ದಿನಗಳ ಕಾಲ ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶ ನೀಡಿದರು.

ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಮತ್ತು 500 (ಮಾನನಷ್ಟ ವ್ಯವಹರಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿಯ ಅವರು ಕೊನೆಯದಾಗಿ 2021ರ ಅಕ್ಟೋಬರ್‌ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯ ಅನುಮತಿ ನೀಡಿದೆ ಎಂದು ಕಾಂಗ್ರೆಸ್‌ ಮುಖಂಡ ಮತ್ತು ನ್ಯಾಯವಾದಿ ಬಾಬು ಮಂಗುಕೀಯ ಹೇಳಿದ್ದಾರೆ. ತೀರ್ಪಿನ ವೇಳೆ ರಾಹುಲ್‌ ಗಾಂಧಿ ಕೂಡ ನ್ಯಾಯಾಲಯದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.