ಬೆಂಗಳೂರು: ಕೊರೊನಾ ಸೋಂಕಿತರಾಗಿದ್ದ 104 ವರ್ಷದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರು ಬುಧವಾರ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದರು.
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಅವರಿಗೆ ಚಿಕಿತ್ಸೆ ಒದಗಿಸಲಾಗುತ್ತಿತ್ತು. ಅವರು ಹೃದಯ ಕಾಯಿಲೆ, ಅಧಿಕ ರಕ್ತದೊತ್ತಡ, ಬ್ರಾಂಕೈಟಿಸ್ (ಶ್ವಾಸನಾಳಗಳ ಒಳಪೊರೆಯ ಉರಿಯೂತ) ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರಿಗೆ ಡಾ.ಸಿ.ಎನ್. ಮಂಜುನಾಥ್ ನೇತೃತ್ವದ ವೈದ್ಯರ ತಂಡವು ಚಿಕಿತ್ಸೆ ಒದಗಿಸಿದೆ. 7 ದಿನಗಳಲ್ಲಿ ಅವರು ಚೇತರಿಸಿಕೊಂಡಿದ್ದಾರೆ.
‘ದೊರೆಸ್ವಾಮಿ ಅವರಿಗೆ ಜ್ವರ, ನೆಗಡಿ ಹಾಗೂ ಕೆಮ್ಮಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಮೇ 6ರಂದು ಕೋವಿಡ್ ಪರೀಕ್ಷೆ ಮಾಡಿದಾಗ ಸೋಂಕಿತರಾಗಿರುವುದು ದೃಢಪಟ್ಟಿತು. ಅವರಿಗೆ ಹೃದಯ ಸಂಬಂಧಿ ಕಾಯಿಲೆಯಿದೆ. ಅಧಿಕ ರಕ್ತದೊತ್ತಡ ಸೇರಿದಂತೆ ವಿವಿಧ ಸಮಸ್ಯೆಗಳುನ್ನು ಕೂಡ ಎದುರಿಸುತ್ತಿದ್ದರು. 7 ದಿನಗಳು ಅವರಿಗೆ ಚಿಕಿತ್ಸೆ ಒದಗಿಸಲಾಗಿದೆ. ಈಗ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿದ್ದಾರೆ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ತಿಳಿಸಿದರು.
‘ಅವರ ಶ್ವಾಸಕೋಶಕ್ಕೆ ಯಾವುದೇ ರೀತಿಯ ಹಾನಿಯಾಗಿರಲಿಲ್ಲ. ಹಾಗಾಗಿ, ಸಾಮಾನ್ಯ ಚಿಕಿತ್ಸೆಯನ್ನೇ ಒದಗಿಸಲಾಯಿತು.ರಕ್ತದಲ್ಲಿನ ಆಮ್ಲಜನಕ ಪ್ರಮಾಣವು ನಿಯಂತ್ರಣದಲ್ಲಿತ್ತು. ಆದ್ದರಿಂದ ವೈದ್ಯಕೀಯ ಆಮ್ಲಜನಕ ಬೇಕಾಗಲಿಲ್ಲ. ಶತಾಯುಷಿ ಆದ ಅವರಿಗೆ ವೈರಾಣು ಸಮಸ್ಯೆಯನ್ನು ಉಂಟುಮಾಡಲಿಲ್ಲ. ಅದೇ 25ರಿಂದ 30 ವರ್ಷದ ಕೆಲವರು ವೈರಾಣುವಿನ ದಾಳಿಯನ್ನು ತಡೆಯಲು ಸಾಧ್ಯವಾಗದೆಯೇ ಗಂಭೀರವಾಗಿ ಅಸ್ವಸ್ಥರಾಗುತ್ತಿದ್ದಾರೆ. ಹಾಗಾಗಿ, ಈ ವೈರಾಣುವಿನ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಬೇಕಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.