ADVERTISEMENT

ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪಿಯುಸಿ ಪರೀಕ್ಷೆ: ನಿಲುವು ತಿಳಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 22:14 IST
Last Updated 15 ಜೂನ್ 2021, 22:14 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಅನುತ್ತೀರ್ಣರಾಗಿ ಪುನಃ ಪರೀಕ್ಷೆ ತೆಗೆದುಕೊಂಡಿರುವ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮಾತ್ರ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಈ ವಿಷಯದಲ್ಲಿ ನಿಲುವು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ನೀಡಿದೆ.

‘ಮೊದಲ ಬಾರಿಗೆ ಪರೀಕ್ಷೆ ಬರೆಯುವವರಿಗೆ ಕೋವಿಡ್ ಕಾರಣಕ್ಕೆ ಪರೀಕ್ಷೆ ನಡೆಸದೆ ಪುನರಾವರ್ತಿತ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಬೇಕು ಎಂಬುದು ತಾರತಮ್ಯ ಆಗಲಿದೆ. ಪ್ರಥಮ ಪಿಯುಸಿ ಅಂಕಗಳನ್ನು ಆಧರಿಸಿ ಅವರನ್ನೂ ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅವಕಾಶ ನೀಡಿ ಸಮಾನತೆ ಕಾಪಾಡಬೇಕು’ ಎಂದು ಕೋರಿ ಜ್ಞಾನಮಂದಿರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ವಿ. ಶ್ರೀನಿವಾಸಗೌಡ ಅರ್ಜಿ ಸಲ್ಲಿಸಿದ್ದಾರೆ.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ‘ಪ್ರಥಮ ಪಿಯುಸಿ ಅಂಕಗಳನ್ನೇ ಆಧರಿಸಿ ಈ ವಿದ್ಯಾರ್ಥಿಗಳನ್ನೂ ಮುಂದಿನ ತರಗತಿಗೆ ಕಳುಹಿಸಲು ಸಾಧ್ಯವೇ’ ಎಂದು ಪ್ರಶ್ನಿಸಿತು.

ADVERTISEMENT

‘ಪದವಿ ಪೂರ್ವ ಶಿಕ್ಷಣ ಇಲಾಖೆ ತನ್ನ ನಿಲುವನ್ನು ಜೂ.17ರೊಳಗೆ ಸ್ಪಷ್ಟಪಡಿಸಬೇಕು’ ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.