ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ಕೈಗೊಂಡ ಕಾರ್ಯಗಳಿಗಾಗಿ ಕರ್ನಾಟಕಕ್ಕೆ 'ದಿ ಇಂಡಿಯಾ ಟುಡೇ ಗ್ರೂಪ್'ನಿಂದ ‘ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ.
ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ನೀಡಲಾದ 'ಇಂಡಿಯಾ ಟುಡೇ ಹೆಲ್ತ್ ಗಿರಿ' ಪ್ರಶಸ್ತಿಯನ್ನು ನಗರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸ್ವೀಕರಿಸಿದರು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಪ್ರಶಸ್ತಿ ಪ್ರದಾನ ಮಾಡಿದರು,
ಸಚಿವ ಡಾ.ಕೆ.ಸುಧಾಕರ್, ‘ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳ ಹೆಚ್ಚಳ, ಆಮ್ಲಜನಕ ಘಟಕ ಸ್ಥಾಪನೆ ಹಾಗೂ ವೆಂಟಿಲೇಟರ್ ಸೌಲಭ್ಯ, ದಾಖಲೆ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡಿರುವುದು ಕೋವಿಡ್ ನಿಯಂತ್ರಣಕ್ಕೆ ನೆರವಾಯಿತು. ಕೋವಿಡ್ ಪರೀಕ್ಷೆ ಹೆಚ್ಚಿಸಿ ಸೊಂಕಿತರನ್ನು ಪತ್ತೆ ಮಾಡಿ ಚಿಕಿತ್ಸೆ ನೀಡುವ ಮೂಲಕ ರೋಗವನ್ನು ನಿಯಂತ್ರಣಕ್ಕೆ ತರಲಾಯಿತು’ ಎಂದರು.
‘ಕೋವಿಡ್ ವಿಚಾರದಲ್ಲಿ ರಾಜ್ಯ ಸರ್ಕಾರ ಕೈಗೊಂಡ ದಿಟ್ಟ ಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋವಿಡ್ ವಿರುದ್ಧ ಹೋರಾಟ ಮುಂದುವರಿಸಲು ಈ ಪ್ರಶಸ್ತಿ ಮತ್ತಷ್ಟು ಶಕ್ತಿ ನೀಡಿದೆ’ ಎಂದೂ ಹೇಳಿದರು.
ಪ್ರಶಸ್ತಿಯ ಅಂತಿಮ ಸುತ್ತಿಗೆ ಐದು ರಾಜ್ಯಗಳು ಆಯ್ಕೆಯಾಗಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.