ಬೆಂಗಳೂರು: ಮಕ್ಕಳ ಹಕ್ಕುಗಳ ಕುರಿತಾದ ವಿಶೇಷ ಅಧಿವೇಶನವನ್ನು ವಿಧಾನ ಪರಿಷತ್ತಿನಲ್ಲಿ ನಡೆಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳಿಗಾಗಿ ಶಾಸಕರ ವೇದಿಕೆ ತೀರ್ಮಾನಿಸಿದೆ.
ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ ವೇದಿಕೆಯ ಸಭೆಸೋಮವಾರ ನಡೆಯಿತು.ವೇದಿಕೆಯ ಸದಸ್ಯರಿಗೆ ಸುಸ್ಥಿರ ಅಭಿವೃದ್ಧಿ ಗುರಿಗಳು ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಹಂಚಲು ಸಭಾಪತಿ ಅಧ್ಯಕ್ಷತೆಯಲ್ಲಿ ಪ್ರತಿ ಅಧಿವೇಶನಕ್ಕೂ ಮೊದಲು ಸಭೆ ನಡೆಸಲು ನಿರ್ಧರಿಸಲಾಯಿತು.
ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ನಡೆಸಬೇಕಿದೆ. ಈ ಸಂಬಂಧ ಮುಖ್ಯಮಂತ್ರಿ ಜೊತೆ ಸಮಾಲೋಚನೆ ನಡೆಸಲು ದಿನಾಂಕ ನಿಗದಿ ಮಾಡಲಾಗುವುದು ಎಂದು ಬಸವರಾಜ ಹೊರಟ್ಟಿ ತಿಳಿಸಿದರು.
ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ಎಲ್ಲ ಸಚಿವರೊಡನೆ ಸಭೆ ನಡೆಸುವ ಅಗತ್ಯವಿದೆ. ಆ ಮೂಲಕ ಮಕ್ಕಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು.
‘ಮಕ್ಕಳು ತಮ್ಮ ಸಮಸ್ಯೆಗಳ ಕುರಿತು ನೇರವಾಗಿ ಸಚಿವರು ಮತ್ತು ಸಭಾಪತಿಗಳಿಗೆ ಪತ್ರ ಬರೆಯಬಹುದು. ಇದಕ್ಕೆ ಸೂಕ್ತ ಉತ್ತರ ನೀಡುವಂತೆ ಎಲ್ಲಾ ಇಲಾಖೆ ಸಚಿವರಿಗೆ ಸಭಾಪತಿ ಕಚೇರಿಯಿಂದ ನಿರ್ದೇಶನ ನೀಡಲಾಗುತ್ತದೆ. ಮಕ್ಕಳಿಗೆ ಈ ಕುರಿತು ಹೆಚ್ಚಿನ ಮಾಹಿತಿ ನೀಡುವುದು ನಿಗಾ ಕೇಂದ್ರದ ಸದಸ್ಯ ಸಂಸ್ಥೆಗಳ ಜವಾಬ್ದಾರಿ’ ಎಂದು ತಿಳಿಸಿದರು.
ಸಮಿತಿ ಸಹ ಸಂಚಾಲಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ತಿನ ಸದಸ್ಯರಾದ ಶಾಂತಾರಾಮ ಸಿದ್ದಿ, ಪ್ರತಾಪ ಸಿಂಹ ಕೆ.ನಾಯಕ್, ಎನ್.ರವಿಕುಮಾರ್, ಶಾಸಕ ಎಂ.ಪಿ. ಕುಮಾರಸ್ವಾಮಿ, ಯುನಿಸೆಫ್ ಸಂವಹನ ತಜ್ಞ ಪ್ರಸೂನ್ ಸೇನ್, ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರದ ರಾಜ್ಯ ಸಂಚಾಲಕ ವಾಸುದೇವ ಶರ್ಮಾ ಸಭೆಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.