ಹನೂರು: ಸದ್ಯದ ಪರಿಸ್ಥಿತಿಯನ್ನು ನೋಡಿ ಹೇಳುವುದಾದರೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ತಾಲೂಕಿನ ಲೊಕ್ಕನಹಳ್ಳಿಯಲ್ಲಿ ಪಬ್ಲಿಕ್ ಶಾಲಾ ಕಟ್ಟಡ ಕಾಮಗಾರಿ ಪರಿಶೀಲಿಸಿ ಬಳಿಕ ಮಾತನಾಡಿದ ಅವರು, 'ರಾಜ್ಯದಲ್ಲಿ ಜೂನ್ 21 ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ ಮಾಡುವ ಬಗ್ಗೆ ಈಗಾಗಲೇ ತೀರ್ಮಾನ ಮಾಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲು ಇನ್ನೂ 2 ತಿಂಗಳು 1 ವಾರ ಬಾಕಿ ಇದೆ. ಪರೀಕ್ಷೆ ನಡೆಸುವ ಕುರಿತು ಆರೋಗ್ಯ ಇಲಾಖೆಯಿಂದ ವರದಿ ಕೇಳಿದ್ದೇವೆ. ವರದಿ ಶೀಘ್ರದಲ್ಲಿಯೇ ಶಿಕ್ಷಣ ಇಲಾಖೆಯ ಕೈ ಸೇರಲಿದೆ. ಇನ್ನೂ ಸಮಯವಿರುವುದರಿಂದ. ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿವೆ. ವಿಧಾನ ಪರಿಷತ್ ಸಭಾಪತಿ ಅವರು ಕೂಡ ಪರೀಕ್ಷೆ ನಡೆಯಬೇಕು ಎಂದು ಪತ್ರ ಬರೆದಿದ್ದಾರೆ ಎಂದರು.
1ರಿಂದ 5 ಮತ್ತು 6 ರಿಂದ 9 ನೇ ತರಗತಿ ಪರೀಕ್ಷೆ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. 1 ರಿಂದ 9 ನೇ ತರಗತಿಗಳಿಗೆ ಪರೀಕ್ಷೆ ಮಾಡುವ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಲಾಗಿದೆ. ಶೀಘ್ರವಾಗಿ ಪರೀಕ್ಷೆಯ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.
ಕೋವಿಡ್ಗೆ ಸಂಬಂಧಪಟ್ಟಂತೆ ಭಾನುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ಕರೆಯಲಾಗಿದೆ. ಸಭೆಗೆ ಎಲ್ಲ ವಿರೋಧ ಪಕ್ಷಗಳು ಭಾಗವಹಿಸಿ ಸಲಹೆ ಮತ್ತು ಸೂಚನೆ ಕೊಡಬೇಕು. ಸರ್ವ ಪಕ್ಷಗಳ ಸಭೆ ಬರೋದಿಲ್ಲ ಎಂಬ ಕಾಂಗ್ರೆಸ್ ಪಕ್ಷದ ನಿರ್ಧಾರ ಸರಿಯಾದ ಕ್ರಮ ಅಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪರಸ್ಪರ ವಿರೋಧಿಗಳು ನಿಜ. ಆದರೆ, ಇಬ್ಬರಿಗೂ ಕೊರೊನಾ ವಿರೋಧಿ ಆಗಿದೆ. ಹಾಗಾಗಿ, ರಾಜಕೀಯ ಪಕ್ಷಗಳು, ಧಾರ್ಮಿಕ ಮುಖಂಡರು ಸಾರ್ವಜನಿಕರು ಒಟ್ಟಾಗಿ ಸೇರಿಕೊಂಡು ಕೊರೊನಾ ಹಿಮ್ಮೆಟ್ಟಿಸುವ ಕಾರ್ಯ ಮಾಡಬೇಕಾಗಿದೆ. ವಿಪತ್ತಿನ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸರಿಯಾದ ಕ್ರಮ ಅಲ್ಲ ಎಂದು ಸಚಿವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.