ಬೆಂಗಳೂರು: ‘ನಿರುದ್ಯೋಗಿ ಯುವಕರು ತಮ್ಮ ಪದವಿ ಪ್ರಮಾಣಪತ್ರವನ್ನು ಪ್ರಧಾನಿ ನರೇಂದ್ರ ಮೋದಿಗೆ ಹಿಂದಿರುಗಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದಿದ್ದ ಪ್ರಧಾನಿ, ನುಡಿದಂತೆ ನಡೆದುಕೊಳ್ಳಲು ವಿಫಲರಾಗಿದ್ದಾರೆ’ ಎಂದರು.
'ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳು ನುಡಿದಂತೆ ನಡೆಯಬೇಕು. ಅದೇ ನಮ್ಮ ನೀತಿ ಹಾಗೂ ಧರ್ಮ. ನಾವು ಜನರ ಸೇವೆ ಮಾಡಲು ಬಂದಿದ್ದು, ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಇದನ್ನು ನಮ್ಮ ದೇಶ ಹಾಗೂ ನಾಡಿನ ಎಲ್ಲ ಧರ್ಮದಲ್ಲೂ ಬಸವಣ್ಣನವರ ಕಾಲದಿಂದಲೂ ನಾಯಕರು ಪ್ರತಿಪಾದಿಸಿಕೊಂಡು ಬಂದಿದ್ದಾರೆ’ ಎಂದರು.
'ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದ ಮೋದಿ, ಅದು ಸಾಧ್ಯವಾಗದಿದ್ದರೂ ಕನಿಷ್ಠ ಖಾಸಗಿ ಉದ್ಯೋಗ
ಸೃಷ್ಟಿ ಆಗುವಂತೆ ಮಾಡಬೇಕಿತ್ತು. ಉದ್ಯೋಗ ಸೃಷ್ಟಿಗೆ ಅಗತ್ಯ ನೀತಿ ರೂಪಿಸಬೇಕಾಗಿತ್ತು’ ಎಂದೂ ಅವರು ಹೇಳಿದರು.
'ಕೋವಿಡ್ ಸಂದರ್ಭದಲ್ಲಿ ದೇಶದಲ್ಲಿ 2 ಕೋಟಿ ಉದ್ಯೋಗ ನಷ್ಟವಾಗಿದೆ. ಸರ್ಕಾರ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಾಗದ ಕಾರಣ ಮೋದಿ ಅವರ ಜನ್ಮದಿನವನ್ನು ಯುವ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ದಿನವಾಗಿ ಆಚರಿಸಿದ್ದಾರೆ’ ಎಂದು ಶಿವಕಕುಮಾರ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.