ಆನೇಕಲ್: ಬೊಮ್ಮಸಂದ್ರ ಮತ್ತು ಚಂದಾಪುರ ಪುರಸಭೆ ವ್ಯಾಪ್ತಿಯ ಎಲ್ಲ ವಾರ್ಡ್ಗಳಿಗೆ ತ್ವರಿತವಾಗಿ ಕಾವೇರಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.
ಅವರು ತಾಲ್ಲೂಕಿನ ಬನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಜಲ ಮಂಡಳಿಯಿಂದ ಆನೇಕಲ್ ತಾಲ್ಲೂಕಿಗೆ 30ಎಂಎಲ್ಡಿ ಕಾವೇರಿ ನೀರು ಪೂರೈಕೆಯಾಗುತ್ತಿದ್ದು ಸೂರ್ಯಸಿಟಿಗೆ ಹೆಚ್ಚಿನ ಅವಶ್ಯಕತೆಯಿಲ್ಲದೇ ಇರುವುದರಿಂದ ಉಳಿಕೆ ನೀರನ್ನು ಬೊಮ್ಮಸಂದ್ರ, ಚಂದಾಪುರ ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಿಗೆ ಪೂರೈಕೆ ಮಾಡಲಾಗುವುದು. ಹೆಬ್ಬಗೋಡಿ ನಗರಸಭೆಗೂ ಕಾವೇರಿ ನೀರು ಪೂರೈಕೆಯ ಬಹುತೇಕ ಪ್ರಕ್ರಿಯೆ ಮುಗಿದಿದೆ. ಬನಹಳ್ಳಿ ಗ್ರಾಮಕ್ಕೆ 1.58ಕೋಟಿ ರೂ. ನಗರೋತ್ಥಾನ ಯೋಜನೆಯಡಿ ಮಂಜೂರಾಗಿದೆ. ರಸ್ತೆ, ಚರಂಡಿ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.
ಪ್ರಚಾರ ಸಮಿತಿ ಅಧ್ಯಕ್ಷ ಬಿ.ರಾಮಚಂದ್ರರೆಡ್ಡಿ ಮಾತನಾಡಿ ಕೇಂದ್ರದ ಬಿಜೆಪಿ ಸರ್ಕಾರ ಜನಪರವಾದ ಯಾವುದೇ ಕಾರ್ಯಕ್ರಮಗಳನ್ನು ಕೈಗೊಂಡಿಲ್ಲ. ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದಾರೆ. ರೈತರು, ಕಾರ್ಮಿಕರು ಪರದಾಡುವಂತಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮತ್ತಷ್ಟು ಅಭಿವೃದ್ಧಿ ಕಾಂಗ್ರೆಸ್ ಬೆಂಬಲಿಸಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜಣ್ಣ, ಚಂದ್ರಪ್ಪ, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವರಾಮ್ರೆಡ್ಡಿ, ಯೋಜನಾ ಪ್ರಾಧಿಕಾರದ ಸದಸ್ಯ ಲಿಂಗಣ್ಣ, ಬೊಮ್ಮಸಂದ್ರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯ್ ರೆಡ್ಡಿ, ಪುರಸಭಾ ಸದಸ್ಯರಾದ ಶಿಲ್ಪಾ, ರೇಣುಕಾ, ಯಲ್ಲಮ್ಮ, ಗೋಪಾಲರೆಡ್ಡಿ, ಮುಖಂಡರಾದ ತಿಮ್ಮಾರೆಡ್ಡಿ, ಸುರೇಶ್, ಶ್ರೀರಾಮ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.