ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇಂತಹ ಘಟನೆಗಳು ಸಂಭವಿಸಿದಾಗ ವಿಚಾರಣೆ ನಡೆದು ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಲು ಸುಮಾರು ವರ್ಷಗಳು ತೆಗೆದುಕೊಳ್ಳುತ್ತಿರುವುದು ವಿಪರ್ಯಾಸ.
ನಮ್ಮ ನೆರೆಯ ರಾಜ್ಯ ಆಂಧ್ರಪ್ರದೇಶದ ಸರ್ಕಾರವು ಹೈದರಾಬಾದ್ನಲ್ಲಿ 2019ರಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ರಾಜ್ಯದಲ್ಲಿ ದಿಶಾ ಕಾಯ್ದೆ– 2019 ಅನ್ನು ಜಾರಿಗೊಳಿಸಿದೆ. ಈ ಮೂಲಕ ಅಂತಹ ಅಪರಾಧಗಳ ತ್ವರಿತ ವಿಚಾರಣೆಗೆ ಅವಕಾಶ ಕಲ್ಪಿಸಿದೆ. ತನಿಖೆ, ಆರೋಪಪಟ್ಟಿ ಸಲ್ಲಿಕೆ, ಸಾಕ್ಷ್ಯಾಧಾರ ಸಂಗ್ರಹವೂ ಒಳಗೊಂಡಂತೆ 21 ದಿನಗಳ ಕಾಲಾವಧಿಯಲ್ಲಿ ತೀರ್ಪು ನೀಡುವುದು ಈ ಕಾಯ್ದೆಯ ಉದ್ದೇಶವಾಗಿದೆ.
ತ್ವರಿತಗತಿಯಲ್ಲಿ ವಿಚಾರಣೆ ಪೂರ್ಣಗೊಂಡು ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವ ಮೂಲಕ ಸಮಾಜದಲ್ಲಿ ಮತ್ತೆ ಇಂತಹ ಅಮಾನವೀಯ ಘಟನೆಗಳು ನಡೆಯದಂತೆ ಹಾಗೂ ಅಂಧ ಕಾಮುಕರಿಗೆ ಎಚ್ಚರಿಕೆ ಗಂಟೆಯಂತೆ ಇರುವ ಈ ಕಾಯ್ದೆಯನ್ನು ಕರ್ನಾಟಕವೂ ಸೇರಿದಂತೆ ದೇಶದ ಇತರ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ್ಠಾನಗೊಳಿಸಬೇಕು.
-ಚನ್ನಕೇಶವ ಜಿ.ಕೆ., ತರೀಕೆರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.