ಬಾಗಲಕೋಟೆ: ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಎಚ್.ವೈ.ಮೇಟಿ ಹಾಗೂ ಬಿಜೆಪಿ ಅಭ್ಯರ್ಥಿಯಾದ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರ ಶಕ್ತಿ ಪ್ರದರ್ಶನದ ಮೆರವಣಿಗೆ ಗದ್ದಲಕ್ಕೆ ತಿರುಗಿದೆ.
ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮೆರವಣಿಗೆ ಪರಸ್ಪರ ಎದುರುಗೊಂಡಿದ್ದು, ಈ ವೇಳೆ ಬೆಂಬಲಿಗರು ಪೈಪೋಟಿಗಿಳಿದು ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪರ ಘೋಷಣೆ ಕೂಗಿದರು. ಆಗ ನೂಕಾಟ, ತಳ್ಳಾಟ, ಪರಸ್ಪರ ಆರೋಪ- ಪ್ರತ್ಯಾರೋಪಕ್ಕೆ ದಾರಿಯಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.
ತಕ್ಷಣ ಮಧ್ಯಪ್ರವೇಶಿಸಿದ ಪೊಲೀಸರು ಹಾಗೂ ಅರೆ ಸೇನಾ ಪಡೆ ಸಿಬ್ಬಂದಿ ಲಘು ಲಾಠಿ ಪ್ರಹಾರ ನಡೆಸಿ ಸ್ಥಳದಲ್ಲಿದ್ದವರನ್ನು ಚದುರಿಸಿದರು.
ಶಾಸಕ ಎಚ್.ವೈ. ಮೇಟಿ ಬೆಂಬಲಕ್ಕೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಬಂದಿದ್ದು, ಕಾಶಪ್ಪನವರ ಹೆಗಲ ಮೇಲೆ ಹೊತ್ತ ಅಭಿಮಾನಿಗಳು ಜೈಕಾರ ಹಾಕಿದರು. ಇದು ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಪರಸ್ಪರ ಜಿದ್ದಾಜಿದ್ದಿಗೆ ದಾರಿಯಾಯಿತು. ಈ ವೇಳೆ ಕೆಲವರು ಪೊಲೀಸರ ಜೊತೆ ವಾಗ್ವಾದ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.