ಮ್ಯಾಂಚೆಸ್ಟರ್: ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ವಿಶ್ವದ ಅತಿಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಪಂದ್ಯಾವಳಿಗಾಗಿ ಪ್ರವಾಸಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ಇಂಗ್ಲೆಂಡ್ನಮಾಜಿ ನಾಯಕ ನಾಸೀರ್ ಹುಸೇನ್ ಆರೋಪಿಸಿದ್ದಾರೆ.
ಕೋವಿಡ್ ಭೀತಿಯಿಂದಾಗಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆಯಬೇಕಾಗಿದ್ದ ಅಂತಿಮ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗಿತ್ತು.ಕೇವಲ ಎರಡು ತಾಸಿಗೂ ಮುನ್ನ ಪಂದ್ಯ ರದ್ದುಗೊಳಿಸಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಏತನ್ಮಧ್ಯೆ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯವನ್ನು ನಿಕಟ ಭವಿಷ್ಯದಲ್ಲಿ ಆಯೋಜಿಸಲು ಬಿಸಿಸಿಐ ಉತ್ಸುಕತೆ ತೋರಿದೆ.
ಬಹುನಿರೀಕ್ಷಿತ ಐಪಿಎಲ್ ಟೂರ್ನಿಯು ಕೋವಿಡ್ನಿಂದಾಗಿ ಯುಎಇಗೆ ಸ್ಥಳಾಂತರಿಸಲಾಗಿದೆ. ಸೆಪ್ಟೆಂಬರ್ 19ರಂದು ಟೂರ್ನಿಯು ಪುನರಾರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಆಟಗಾರರು ಕೋವಿಡ್ ಸೋಂಕು ತಗಲುವಂತಹ ಯಾವುದೇ ಅಪಾಯವನ್ನು ಆಹ್ವಾನಿಸಲು ಬಯಸುತ್ತಿಲ್ಲ. ಐಪಿಎಲ್ಗೆ ಆಟಗಾರರು ಅಲಭ್ಯವಾದರೆ ಬಿಸಿಸಿಐ ಆರ್ಥಿಕವಾಗಿ ಅಪಾರ ನಷ್ಟವನ್ನು ಅನುಭವಿಸಲಿದೆ ಎಂದು ಹುಸೇನ್ ಹೇಳಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿವೆ.
ಆದ್ಯಾಗೂ ಸನ್ನಿವೇಶವನ್ನು ಅರ್ಥ ಮಾಡಿಕೊಳ್ಳುವುದಾಗಿ ನಾಸೀರ್ ಹುಸೇನ್ ಹೇಳಿದ್ದಾರೆ. ಐದನೇ ಟೆಸ್ಟ್ ಆರಂಭಕ್ಕೂ ಮುನ್ನ ಭಾರತದ ಜೂನಿಯರ್ ಫಿಸಿಯೊ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಇದಾದ ಬೆನ್ನಲ್ಲೇ ಭಾರತೀಯ ಆಟಗಾರರ ಆರ್ಟಿ-ಪಿಸಿಆರ್ ಪರೀಕ್ಷಾ ವರದಿಯು ನೆಗೆಟಿವ್ ಬಂದರೂ ಕೂಡಾ ಇನ್ಕ್ಯುಬೇಷನ್ ಅವಧಿಯಲ್ಲಿ ವೈರಾಣು ಮತ್ತೆ ದೃಢಪಟ್ಟರೆ ಆಟಗಾರರ ಅಭಾವವನ್ನು ಎದುರಿಸಲಿದೆ ಎಂದು ಹೇಳಿದ್ದಾರೆ.
ಈ ಎಲ್ಲದರ ನಡುವೆ ಅತ್ಯಂತ ಕಠಿಣ ಜೀವ ಸುರಕ್ಷಾ ವಲಯದಲ್ಲಿ ಇದ್ದುಕೊಂಡು ಟೆಸ್ಟ್ ಕ್ರಿಕೆಟ್ ಆಡಿರುವ ಭಾರತೀಯ ಆಟಗಾರರ ಮನೋಬಲವನ್ನು ಶ್ಲಾಘಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.