
ಪಂಡಿತ್ ಛನ್ನೂಲಾಲ್ ಮಿಶ್ರಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ
ಲಖನೌ: ಪ್ರಸಿದ್ಧ ಶಾಸ್ತ್ರೀಯ ಸಂಗೀತ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಛನ್ನೂಲಾಲ್ ಮಿಶ್ರಾ (89) ಅವರು ಗುರುವಾರ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಿಶ್ರಾ ಅವರು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿನ ತಮ್ಮ ಮಗಳ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
1936ರ ಆಗಸ್ಟ್ 3ರಂದು ಆಜಮ್ಗಢ ಜಿಲ್ಲೆಯಲ್ಲಿ ಜನಿಸಿದ್ದ ಮಿಶ್ರಾ ಅವರು, ಶಾಸ್ತ್ರೀಯ ಸಂಗೀತದ ಪ್ರಕಾರಗಳಾದ ಠುಮ್ರಿ ಮತ್ತು ಸೋಹರ್ನಲ್ಲಿ ಜನಪ್ರಿಯತೆ ಗಳಿಸಿದ್ದರು.
ಮಿಶ್ರಾ ಅವರು ದೇಶ–ವಿದೇಶಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದರು. ಅವರ ‘ರಾಮ್ ವಿರಾಟ್’ ಮತ್ತು ‘ಠುಮ್ರಿ ಮೆಹಫಿಲ್’ ಈಗಲೂ ಸಂಗೀತಪ್ರಿಯರ ಅಚ್ಚುಮೆಚ್ಚಿನ ಧ್ವನಿಸುರುಳಿಗಳಾಗಿವೆ. ಸಂಗೀತ ಕ್ಷೇತ್ರದ ಸಾಧನೆಗಾಗಿ ಮಿಶ್ರಾ ಅವರಿಗೆ 2020ರಲ್ಲಿ ಪದ್ಮವಿಭೂಷಣ ಪುರಸ್ಕಾರ ಲಭಿಸಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ವಾರಾಣಸಿಯಲ್ಲಿ ಲೋಕಸಭೆ ಸ್ಥಾನಕ್ಕೆ ಸ್ಪರ್ಧಿಸುವಂತೆ ಸೂಚನೆ ನೀಡಿದವರಲ್ಲಿ ಮಿಶ್ರಾ ಕೂಡ ಒಬ್ಬರಾಗಿದ್ದರು.
‘ಖ್ಯಾತ ಶಾಸ್ತ್ರೀಯ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ಅವರ ನಿಧನದಿಂದ ದುಃಖವಾಗಿದೆ. ಮಿಶ್ರಾ ಅವರು ಭಾರತೀಯ ಕಲೆ ಮತ್ತು ಸಂಸ್ಕೃತಿಯ ಪುಷ್ಟೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಶಾಸ್ತ್ರೀಯ ಸಂಗೀತವನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವಲ್ಲಿ ಮತ್ತು ಭಾರತೀಯ ಸಂಪ್ರದಾಯವನ್ನು ವಿಶ್ವ ವೇದಿಕೆಯಲ್ಲಿ ಸ್ಥಾಪಿಸುವಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ನಾನು ಅವರ ಪ್ರೀತಿ ಮತ್ತು ಆಶೀರ್ವಾದವನ್ನು ಪಡೆದಿರುವುದು ನನ್ನ ಅದೃಷ್ಟ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಓಂ ಶಾಂತಿ’ ಎಂದು ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.