ಸಂಗೀತ
ಸಾಂಕೇತಿಕ ಚಿತ್ರ
ಬೆಂಗಳೂರು: ರಾಜ್ಯಮಟ್ಟದ 19ನೇ ಸುಗಮ ಸಂಗೀತ ಸಮ್ಮೇಳನವನ್ನು ಮೇ ತಿಂಗಳು ಮೈಸೂರಿನಲ್ಲಿ ಆಯೋಜಿಸಲು ಕರ್ನಾಟಕ ಸುಗಮ ಸಂಗೀತ ಪರಿಷತ್ತು ನಿರ್ಧರಿಸಿದೆ.
ಪರಿಷತ್ತಿನ ಅಧ್ಯಕ್ಷ ವೈ.ಕೆ. ಮುದ್ದುಕೃಷ್ಣ ನೇತೃತ್ವದಲ್ಲಿ ಶನಿವಾರ ಇಲ್ಲಿ ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು. ಮುಂದಿನ ಸಮ್ಮೇಳನವನ್ನು ಮೈಸೂರಿನಲ್ಲಿ ನಡೆಸಲು ಈ ಸಭೆಯಲ್ಲಿ ತೀರ್ಮಾನಿಸಲಾಯಿತು. ಇದೇ ವೇಳೆ ಸುಗಮ ಸಂಗೀತ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲಾಯಿತು.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಸುಗಮ ಸಂಗೀತವನ್ನು ಬೇರ್ಪಡಿಸಿ, ಈ ಪ್ರಕಾರಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪಿಸುವ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂಬ ತೀರ್ಮಾನವನ್ನೂ ಸಭೆಯಲ್ಲಿ ಕೈಗೊಳ್ಳಲಾಯಿತು. ಸುಗಮ ಸಂಗೀತ ಪರಿಷತ್ತಿಗೆ ಅನುದಾನ ನೀಡುವ ಕುರಿತು ರಾಜ್ಯ ಸರ್ಕಾರ ತಳೆದಿರುವ ಧೋರಣೆ ಬಗ್ಗೆ ಅಸಮಾಧಾನ ವ್ಯಕ್ತವಾಯಿತು.
ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಮೈಸೂರು ಘಟಕದ ಅಧ್ಯಕ್ಷ ನಾಗರಾಜ್ ವಿ. ಬೈರಿ, ಮಂಡ್ಯ ಘಟಕದ ಅಧ್ಯಕ್ಷ ಡೇವಿಡ್ ಪ್ರತಿಭಾಂಜಲಿ, ರಾಜ್ಯ ಘಟಕದ ಕಾರ್ಯಾಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಸಂಚಾಲಕರಾದ ನಾಗಚಂದ್ರಿಕಾ ಭಟ್, ಮಂಗಳ, ಬಿ.ಆರ್. ಲಕ್ಷ್ಮಣ ರಾವ್, ಖಜಾಂಚಿ ಪ್ರಶಾಂತ್ ಉಡುಪ ಹಾಗೂ ಕಾರ್ಯದರ್ಶಿ ಪ್ರವೀಣ್ ಬಿ.ವಿ. ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.