ಶಿವಕುಮಾರ ಸ್ವಾಮೀಜಿ ಕುರಿತು ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಅವರ ಕವನ ‘ಶ್ರೀ ಸಿದ್ಧಗಂಗೆಯ ಶ್ರೀಚರಣಕ್ಕೆ’
–––
ಹರನ ಕರುಣೋದಯದ ತೆರದಲಿ ಬೆಳಗು ತೆರೆಯುವ ಹೊತ್ತಿಗೆ
ವೇದಘೋಷದ ದಿವ್ಯಲಹರಿಯು ಮನವ ತೊಳೆಯಲು ಮೆಲ್ಲಗೆ
ಬರುವ ಶ್ರೀಗುರು ಪಾದುಕೆಯ ದನಿ ಅನುರಣಿತವಾಗಲು ಮೌನಕೆ
ಸಿದ್ಧಗಂಗೆಯ ನೆಲವು ಜಲವೂ ನಮಿಸಿ ನಿಲುವುದು ಸುಮ್ಮಗೆ
ಬೆಟ್ಟ ಬಂಡೆಯ ನಡುವೆ ಗಿಡ ಮರ ಹೂವನೆತ್ತಿರೆ ಪೂಜೆಗೆ
ದೇಗುಲದ ಪೂಜಾರತಿಯ ಗಂಟೆಯ ಮೊಳಗು ಮುಟ್ಟಲು ಬಾನಿಗೆ
ಧೂಪಗಂಧವು ಮಂದಮಂದಾನಿಲ ಜೊತೆಯೊಳು ಮನಸಿಗೆ
ಸಂಭ್ರಮವನುಕ್ಕಿಸೆ ಬೆಳಗು ಇಳಿವುದು ಸಿದ್ಧಗಂಗೆಯ ಕ್ಷೇತ್ರಕೆ
ಇಲ್ಲಿ ಇಲ್ಲ ಪವಾಡದದ್ಭುತ ಅಥವ ಉತ್ಸವದಬ್ಬರ
ಮುಡಿಯನೆತ್ತಿದೆ ಸರಳ ಸಾಧಾರಣ ಬದುಕಿನ ಗೋಪುರ
ಅದರ ಮೇಲಿದೆ ತ್ಯಾಗಧ್ವಜ ಕೈಬೀಸಿ ಕರೆವುದು ಪಥಿಕರ
ಪರಮ ನಿರಪೇಕ್ಷೆಯಲ್ಲಿ ದಿನವೂ ಸೇವೆಗಾಗಿದೆ ಸರ್ವರ
ಭಿಕ್ಷೆ ಹೊರಟಿದೆ ಜಂಗಮದ ಜೋಳಿಗೆ ಲಕ್ಷಜನಗಳ ಪೊರೆದಿದೆ
ತೀರ್ಥವಾಗಿದೆ ಭಕ್ತರಿಗೆ ಜೊತೆಗೇ ಸ್ಫೂರ್ತಿಯಾಗಿದೆ ಬುದ್ಧಿಗೆ
ಬಂದ ಹಣತೆಗೆ ಎಣ್ಣೆ–ಬತ್ತಿಯ ದೀಪ್ತದಾನವ ಮಾಡಿದೆ
ರಕ್ಷೆಯಾಗಿದೆ ಮುಗಿಲನೇರಿದ ಎಷ್ಟೊ ರೆಕ್ಕೆಯ ಹಾದಿಗೆ
ಸದ್ದುಗದ್ದಲವಿಲ್ಲದ ಸಾಧನೆ ಇಲ್ಲಿ ಗದ್ದುಗೆಯೇರಿದೆ
ಕಾಯಕವೆ ಕೈಲಾಸವೆನ್ನುವ ಮಾತು ಕೃತಿಯೊಳು ಮೂಡಿದೆ
ಕಾವಿಯುಡುಗೆಯನುಟ್ಟು ನಭವೇ ಕಿರಣ ಹಸ್ತವ ಚಾಚಿದೆ
ಎಲ್ಲ ನನ್ನವರೆನುವ ಭಾವದ ಕರುಣೆಯೇ ಕಣ್ತೆರೆದಿದೆ
–ಡಾ. ಜಿ.ಎಸ್. ಶಿವರುದ್ರಪ್ಪ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.