ನವದೆಹಲಿ (ಪಿಟಿಐ): ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಕುಸಿತ ತಡೆಯಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಸೋಮವಾರ ಇಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಜತೆ ಚರ್ಚೆ ನಡೆಸಿದರು. ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಡಿ. ಸುಬ್ಬರಾವ್ ಜತೆಗೂ ಇದೇ ವಿಚಾರವಾಗಿ ಪ್ರತ್ಯೇಕ ಮಾತುಕತೆ ನಡೆಸಿದರು.
`ಜುಲೈ 30ರಂದು ಆರ್ಬಿಐ ಮೊದಲ ತ್ರೈಮಾಸಿಕ ಹಣಕಾಸು ನೀತಿ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಹಣದುಬ್ಬರ ಏರಿಳಿತವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ' ಎಂದು ಸುಬ್ಬರಾವ್ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಸೋಮವಾರ ಡಾಲರ್ ವಿರುದ್ಧ ರೂಪಾಯಿ ವಿನಿಮಯ ಮೌಲ್ಯ 33 ಪೈಸೆಗಳಷ್ಟು ಕುಸಿತ ಕಂಡು ರೂ.59.89ಕ್ಕೆ ಇಳಿದಿದೆ.
ರೂಪಾಯಿ ಕುಸಿತದಿಂದ ದೇಶದ ವಿಶಾಲ ಅರ್ಥವ್ಯಸ್ಥೆಯ ಮೇಲೆ ಆಗುತ್ತಿರುವ ಪ್ರತಿಕೂಲ ಪರಿಣಾಮಗಳ ಕುರಿತು ಚಿದಂಬರಂ - ಪ್ರಧಾನಿ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಚಿದಂಬರಂ ಅಮೆರಿಕಕ್ಕೆ ಭೇಟಿ ನೀಡಿ ಭಾರತಕ್ಕೆ ಬಂಡವಾಳ ಆಕರ್ಷಿಸುವ ನಿಟ್ಟಿನಲ್ಲಿ ಅಲ್ಲಿನ ಉದ್ಯಮ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಿದ್ದರು. ಈ ವಿಷಯವನ್ನೂ ಅವರು ಪ್ರಧಾನಿಗೆ ವಿವರಿಸಿದರು ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.