ADVERTISEMENT

ಹಣದುಬ್ಬರ: ಪ್ರಧಾನಿ ಚರ್ಚೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2011, 19:30 IST
Last Updated 15 ಅಕ್ಟೋಬರ್ 2011, 19:30 IST

ನವದೆಹಲಿ (ಪಿಟಿಐ): ಹಣದುಬ್ಬರ ದರ ಹೆಚ್ಚಳ ಮತ್ತು ಆರ್ಥಿಕ ವೃದ್ಧಿ ದರ ಕುಸಿಯುತ್ತಿರುವ ಕುರಿತು ಪ್ರಧಾನಿ ಮನಮೋಹನ್ ಸಿಂಗ್ ಶನಿವಾರ ಇಲ್ಲಿ ಹಿರಿಯ ಆರ್ಥಿಕ ಸಲಹೆಗಾರರ ಜತೆ ಚರ್ಚೆ ನಡೆಸಿದರು.

ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್‌ಅಹ್ಲುವಾಲಿಯಾ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ಗವರ್ನರ್ ಡಿ. ಸುಬ್ಬರಾವ್, ಪ್ರಧಾನಿ ಆರ್ಥಿಕ ಸಲಹಾ ಸಮಿತಿ ಅಧ್ಯಕ್ಷ ಸಿ. ರಂಗರಾಜನ್ ಮತ್ತಿತರ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.
 
ಆದರೆ, ಈ ಸಭೆಯಲ್ಲಿ ನಡೆದ ಚರ್ಚೆಯ ಕುರಿತು ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಮೂಲಗಳ ಪ್ರಕಾರ, ಜಾಗತಿಕ ಆರ್ಥಿಕ ಬಿಕ್ಕಟ್ಟು ಮತ್ತು ಹಣದುಬ್ಬರ ಏರಿಕೆ ಕುರಿತು ಅನೌಪಚಾರಿಕ ಚರ್ಚೆ ನಡೆಯಿತು ಎನ್ನಲಾಗಿದೆ.

ಅಕ್ಟೋಬರ್ 25ರಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಎರಡನೆಯ ತ್ರೈಮಾಸಿಕ ಅವಧಿಯ ಹಣಕಾಸು ಪರಾಮರ್ಶೆ ಪ್ರಕಟಿಸಲಿದೆ. ಕಳೆದ ಮಾರ್ಚ್ 2010ರಿಂದ `ಆರ್‌ಬಿಐ~ ಇಲ್ಲಿಯವರೆಗೆ 12 ಬಾರಿ ಅಲ್ಪಾವಧಿ ಬಡ್ಡಿ ದರಗಳಾದ ರೆಪೊ ಮತ್ತು ರಿವರ್ಸ್ ರೆಪೊ ದರಗಳನ್ನು ಹೆಚ್ಚಿಸಿದೆ.

ಈ ಹಿನ್ನೆಲೆಯಲ್ಲಿ ಶನಿವಾರ ನಡೆದ ಸಭೆ ಮಹತ್ವ ಪಡೆದುಕೊಂಡಿದೆ.  ಸೆಪ್ಟೆಂಬರ್ ತಿಂಗಳಲ್ಲಿ ಸಗಟು ಸೂಚ್ಯಂಕ ಆಧರಿಸಿದ ಹಣದುಬ್ಬರ ದರ ಶೇ 9.72ರಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.