ಬೆಂಗಳೂರು: ಸುಮಾರು ₹ 3,427 ಕೋಟಿ ಬಂಡವಾಳ ಹೂಡಿಕೆಯ ನಾಲ್ಕು ಯೋಜನೆಗಳಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ರಾಜ್ಯ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ಯೋಜನೆಗಳಿಂದ 2595 ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ.
ಬೆಂಗಳೂರಿನಲ್ಲಿ 3 ಉದ್ಯಮ: ಬೋಯಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಗರದಲ್ಲಿ ₹ 1152 ಕೋಟಿ ಬಂಡವಾಳ ತೊಡಗಿಸಲಿದೆ. ವೈಮಾನಿಕ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೌಲಭ್ಯದ ಜೊತೆಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಏವಿಯಾನಿಕ್ಸ್ ಉತ್ಪಾದನೆ ಹಾಗೂ ಜೋಡಣೆ ಘಟಕವನ್ನು ಸ್ಥಾಪಿಸಲಿದೆ. ಇದರಿಂದ 2,300 ಮಂದಿಗೆ ಉದ್ಯೋಗ ದೊರಕಲಿದೆ. ಸಿ.ಡಿ.ಸಿ ಡೆವಲಪ್ಮೆಂಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ₹ 740 ಕೋಟಿ ವೆಚ್ಚದಲ್ಲಿ ತಂತ್ರಜ್ಞಾನ ಅನ್ವೇಷಣಾ ಅಂತರ ರಾಷ್ಟ್ರೀಯ ಪಾರ್ಕ್ ಸ್ಥಾಪಿಸಲಿದೆ.
ಯುನಿವರ್ಸಲ್ ಬಿಲ್ಡರ್ಸ್ಗೆ ₹ 525 ಕೋಟಿ ವೆಚ್ಚದಲ್ಲಿ ವಸತಿ ಯೋಜನೆ ಸ್ಥಾಪಿಸಲು ಅನುಮತಿ ನೀಡಲಾಗಿದೆ.
ಕರಾವಳಿ ರಕ್ಷಣಾ ಪಡೆ ತರಬೇತಿ ಕೇಂದ್ರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ₹ 1010 ಕೋಟಿ ವೆಚ್ಚದಲ್ಲಿ ಕರಾವಳಿ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪಿಸಲು ಇಂಡಿಯನ್ ಕೋಸ್ಟ್ ಗಾರ್ಡ್ ಕಂಪೆನಿಗೆ ಸಮಿತಿ ಒಪ್ಪಿಗೆ ನೀಡಿದೆ.
ಸಭೆಯಲ್ಲಿ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ, ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಮಾಹಿತಿ ತಂತ್ರಜ್ಞಾನ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.