ನವದೆಹಲಿ: ಕಡಲೆಯನ್ನು ಕನಿಷ್ಠ ಬೆಂಬಲಬೆಲೆ ಅಡಿ ಖರೀದಿಸಲು ಅನುಮತಿ ನೀಡುವಂತೆ ಕೋರಿ ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ.
ಕೇಂದ್ರದ ಕೃಷಿ ಇಲಾಖೆಯ ಕಾರ್ಯದರ್ಶಿ ಎಸ್.ಕೆ. ಪಟ್ಟನಾಯಕ್ ಅವರನ್ನು ಬುಧವಾರ ಭೇಟಿ ಮಾಡಿದ ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಕುರಿತ ಮನವಿ ಸಲ್ಲಿಸಿದರು.
ಪ್ರಸಕ್ತ ವರ್ಷ ರಾಜ್ಯದ ಗದಗ, ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ, ಬೆಳಗಾವಿ, ಯಾದಗಿರಿ, ಕಲಬುರ್ಗಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅಂದಾಜು 13.63 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಿಂಗಾರು ಹಂಗಾಮಿನ ಬೆಳೆಯನ್ನಾಗಿ ರೈತರು ಕಡಲೆಯನ್ನು ಬೆಳೆದಿದ್ದು, 8.10 ಲಕ್ಷ ಟನ್ ಇಳುವರಿ ಬಂದಿದೆ. ಆದರೆ, ಮುಕ್ತ ಮಾರುಕಟ್ಟೆಯಲ್ಲಿ ದರ ಕುಸಿದಿರುವುದರಿಂದ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಲಕ್ಷ್ಮೇಶ್ವರ, ಗದುಗಿನ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತಿ ಕ್ವಿಂಟಲ್ ಕಡಲೆಗೆ ₹ 3,303ರಿಂದ ₹ 3,649 ದರ ಇದೆ. ಇನ್ನಷ್ಟೇ ಕಡಲೆ ಕಟಾವು ಆರಂಭವಾಗಲಿದ್ದು, ದರ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ನಷ್ಟ ಅನುಭವಿಸುತ್ತಿರುವ ರೈತರಿಗೆ ನೆರವಾಗುವ ಸಲುವಾಗಿ ಪ್ರತಿ ಕ್ವಿಂಟಲ್ ಕಡಲೆಗೆ ₹ 4,400 ದರ ನಿಗದಿಪಡಿಸಿ ಖರೀದಿ ಕೇಂದ್ರ ಆರಂಭಿಸಲು ಅನುಮತಿ ನೀಡಬೇಕು ಎಂದು ಕೋರಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.