ನವದೆಹಲಿ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೇರಿದ ನಂತರ ದೇಶದ ಆರ್ಥಿಕ ವ್ಯವಸ್ಥೆ ಉತ್ತಮಗೊಂಡಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಲೋಕಸಭೆಯಲ್ಲಿ ಇಂದು 2018-19ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮುನ್ನ ಭಾಷಣ ಮಾಡಿದ ಸಚಿವರು, ಭಾರತವೀಗ ವಿಶ್ವದ ಏಳನೇ ಅತಿ ದೊಡ್ಡ ಆರ್ಥಿಕ ವ್ಯವಸ್ಥೆಯಾಗಿದೆ ಎಂದಿದ್ದಾರೆ.
ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಶೇ.8ರಷ್ಟು ಏರಿಕೆ ಕಂಡಿದೆ. 2018- 19ರ ಆರ್ಥಿಕ ವರ್ಷದ ದ್ವಿತೀಯ ಪಾದದಲ್ಲಿ ದೇಶದ ಆರ್ಥಿಕ ಪ್ರಗತಿ ಶೇ. 7.2-ಶೇ. 7.3 ಏರಿಕೆಯಾಗುವ ನಿರೀಕ್ಷೆ ಇದೆ.
ಈ ಬಜೆಟ್ನಲ್ಲಿ ಕೃಷಿ ಮತ್ತು ಗ್ರಾಮೀಣ ವಲಯ ಮತ್ತು ಆರೋಗ್ಯ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮೂಲಸೌಕರ್ಯ ಮತ್ತು ಶಿಕ್ಷಣ ವಲಯದಲ್ಲಿ ಹೂಡಿಕೆ ಹೆಚ್ಚಿಸಲಾಗುವುದು. ಅದೇ ವೇಳೆ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿದ್ದಾರೆ ಜೇಟ್ಲಿ.
75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಿರುವ 2022ನೇ ಇಸವಿಯಲ್ಲಿ ದೇಶದ ರೈತರ ವರಮಾನ ದ್ವಿಗುಣಗೊಳಿಸಲು ಸರ್ಕಾರ ಬದ್ದವಾಗಿದೆ. ಆಹಾರ ಉತ್ಪಾದನೆಯಲ್ಲಿ ಭಾರತ ದಾಖಲೆ ಸೃಷ್ಟಿಸಿದೆ. ಉತ್ಪಾದನೆ ಜತೆ ಬೆಳೆ ಬೆಳೆಯುವ ರೈತರುಗಳಿಗೆ ಹೆಚ್ಚಿನ ಆದಾಯ ಲಭಿಸುವಂತೆ ಮಾಡುವ ಕ್ರಮಗಳನ್ನು ಕೈಗೊಳ್ಳಲಾಗುವುದು. ರೈತರ ಖರ್ಚಿಗಿಂತ ಶೇ.50ರಷ್ಟಾದರೂ ಹೆಚ್ಚಿನ ಆದಾಯ ಸಿಗುವಂತೆ ಮಾಡುವುದೇ ಸರ್ಕಾರದ ಗುರಿಯಾಗಿದೆ. ನೀತಿ ಆಯೋಗ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಚರ್ಚೆ ನಡೆಸಿ ರೈತರ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ಸಿಗುವಂತೆ ಮಾಡಲಾಗುವುದು ಎಂದು ಸಚಿವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
</p></p>
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.