ಬೆಂಗಳೂರು: ಕರ್ನಾಟಕ ವಲಯದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ಥಾನ್ ಪೆಟ್ರೋಲಿಯಂ ಕಂಪನಿಗಳ 238 ಎಲ್ಪಿಜಿ ವಿತರಕರ ನೇಮಕ ಪ್ರಕ್ರಿಯೆಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.
‘ಎಲ್ಪಿಜಿ ವಿತರಕರ ನೇಮಕ ಪ್ರಕ್ರಿಯೆಯಲ್ಲಿ ಅಂಗವಿಕಲ ಅಭ್ಯರ್ಥಿಗಳಿಗೆ ಶೇ 5ರಷ್ಟು ಮೀಸಲು ಒದಗಿಸಿಲ್ಲ’ ಎಂದು ಆಕ್ಷೇಪಿಸಿ ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಆಕ್ಷೇಪಣೆ ಏನು?: ‘ವಿತರಕರ ನೇಮಕಕ್ಕೆ ನೀಡಲಾಗಿರುವ ಜಾಹೀರಾತಿನಲ್ಲಿ ಕೇವಲ 6 ಹುದ್ದೆಗಳನ್ನು ಅಂಗವಿಕಲ ಅಭ್ಯರ್ಥಿಗಳಿಗೆ ಮೀಸಲು ಇರಿಸಲಾಗಿದೆ.
ಆದರೆ, ಈ ಪ್ರಮಾಣ 11 ಇರಬೇಕು. ಬಡತನ ನಿವಾರಣಾ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಅಂಗವಿಕಲರಿಗೆ ಶೇ 5ರಷ್ಟು ಮೀಸಲು ಕಡ್ಡಾಯವಾಗಿ ನೀಡಬೇಕು. ಹಾಗಾಗಿ ಎಲ್ಪಿಜಿ ವಿತರಕರ ನೇಮಕಾತಿಯಲ್ಲಿ ಶೇ 5ರಷ್ಟು ಮೀಸಲು ನೀಡುವಂತೆ ಕೇಂದ್ರ ಸರ್ಕಾರ ಹಾಗೂ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.