ರಾಯಚೂರು: ಟೊಮೆಟೊಗೆ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದಂತಾಗಿದೆ. ಒಂದು ಕೆ.ಜಿ ಟೊಮೆಟೊಗೆ 75 ಪೈಸೆಗೆ ಮಾರಾಟ ಮಾಡಬೇಕಾಗಿದೆ. ಬೆಳೆ ಬೆಳೆಯಲು ಮಾಡಿದ ಖರ್ಚು ಬರುವುದಿಲ್ಲ. ಕೂಡಲೇ ಟೊಮೆಟೊಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿ ಬುಧವಾರ ನಗರದಲ್ಲಿ ಟೊಮೆಟೊ ಬೆಳೆಗಾರರು ಪ್ರತಿಭಟನೆ ನಡೆಸಿದರು.
ಟ್ರ್ಯಾಕ್ಟರ್ ಮತ್ತು ಟಂಟಂ ವಾಹನದಲ್ಲಿ ಟೊಮೆಟೊ ತಂದಿದ್ದ ರಾಯಚೂರು ತಾಲ್ಲೂಕಿನ ಕಡಗಂದೊಡ್ಡಿ, ಚಂದ್ರಬಂಡಾ ಹಾಗೂ ಸುತ್ತಲಿನ ರೈತರು ನಗರದ ಎಲ್ಬಿಎಸ್ ನಗರದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಟೊಮೆಟೊವನ್ನು ರಸ್ತೆಗೆ ಸುರಿದರು. ಉಚಿತವಾಗಿ ಹಂಚಿ ಆಕ್ರೋಶ ವ್ಯಕ್ತಪಡಿಸಿದರು.
ನಿತ್ಯ ಜನಜಂಗುಳಿ ತುಂಬಿರುತ್ತಿದ್ದ ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಟೊಮೆಟೊ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಸಾರ್ವಜನಿಕರು, ಸರ್ಕಾರಿ ಸಿಬ್ಬಂದಿ ರೈತರ ಸ್ಥಿತಿ ಕಂಡು ಮರುಗಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಯಚೂರು ತಾಲ್ಲೂಕು ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ರೈತರು ಟೊಮೆಟೊ ಬೆಳಗಾರರ ಸಮಸ್ಯೆ ಪರಿಹಾರಕ್ಕೆ ಸರ್ಕಾರಕ್ಕೆ ಜಿಲ್ಲಾಡಳಿತ ಕಚೇರಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.ಸಂಘಟನೆ ರಾಯಚೂರು ತಾಲ್ಲೂಕು ಸಮಿತಿ ಅಧ್ಯಕ್ಷ ಜಂಬನಗೌಡ ಕಡಗಂದೊಡ್ಡಿ, ಜಿಲ್ಲಾ ಸಂಚಾಲಕ ಬಸವರಾಜ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ ಪಾಷಾ ದಿದ್ದಗಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.