ಬೆಂಗಳೂರು: ಬಜೆಟ್ ಮಂಡನೆಯಲ್ಲಿ ತಮ್ಮ ದಾಖಲೆಯನ್ನು ತಾವೇ ಮುರಿಯಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಅನ್ನು ಶುಕ್ರವಾರ (ಮಾರ್ಚ್ 7) ಮಂಡಿಸಲಿದ್ದಾರೆ.
ಕಳೆದ ಬಾರಿ ಅವರು ₹3.71 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿ ಬಜೆಟ್ ಗಾತ್ರ ₹4 ಲಕ್ಷ ಕೋಟಿ ದಾಟಬಹುದೆಂದು ಅಂದಾಜಿಸಲಾಗಿದೆ.
ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದು ‘ಗ್ಯಾರಂಟಿ’ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಸರ್ಕಾರ, ಈ ಯೋಜನೆಗಳಿಗೆ ಪ್ರಸಕ್ತ ಸಾಲಿನಲ್ಲಿಯೂ ಬಹುಪಾಲು ತೆಗೆದಿಡಲೇಬೇಕಾದ ಅನಿವಾರ್ಯಕ್ಕೆ ಸಿಲುಕಿದೆ. ಅದರ ಜತೆಗೆ ಯಾವ ಹೊಸ ಯೋಜನೆಗಳನ್ನು ಘೋಷಿಸಲಿದೆ, ಅಭಿವೃದ್ಧಿಗೆ ಪೂರಕವಾದ ಹೊಸ ಕಾರ್ಯಕ್ರಮಗಳನ್ನು ರೂಪಿಸಲಿದೆ ಎಂಬ ಕುತೂಹಲವೂ ಮನೆ ಮಾಡಿದೆ.
ಏರಿಕೆಯಾಗುತ್ತಲೇ ಇರುವ ಬದ್ಧ ವೆಚ್ಚ ಮತ್ತು ಚಾಲ್ತಿಯಲ್ಲಿರುವ ಯೋಜನೆಗಳಿಗೆ ಅನುದಾನ ಒದಗಿಸುವ ಜೊತೆಗೆ, ಹೊಸ ಘೋಷಣೆಗಳಿಗೆ ಹಣ ಹೊಂದಿಸಿ ಜನ ಮೆಚ್ಚುವ ಆಯವ್ಯಯವೆಂದು ಬಣ್ಣಿಸಿಕೊಳ್ಳುವ ಸವಾಲು ಮುಖ್ಯಮಂತ್ರಿಯವರ ಮುಂದಿದೆ. ಬಡವರು, ನಿರ್ಗತಿಕರು, ಹಿಂದುಳಿದವರು, ರೈತರ ಹೀಗೆ ವಿವಿಧ ವರ್ಗಗಳ ಉದ್ಧಾರ, ಕೈಗಾರಿಕೆಯೂ ಸೇರಿದಂತೆ ನಾನಾ ವಲಯಗಳ ಅಭಿವೃದ್ಧಿ, ಬೆಂಗಳೂರು ಅಭಿವೃದ್ಧಿಗೆ ಉತ್ತೇಜನ, ನೀರಾವರಿ ಯೋಜನೆಗಳಿಗೆ ಹಣ ನೀಡಿಕೆ ಘೋಷಣೆಯ ನಿರೀಕ್ಷೆಗಳಿವೆ.
ಬಹುತೇಕ ಸಚಿವರು ತಮ್ಮ ಇಲಾಖೆಗಳಿಗೆ ಹೆಚ್ಚು ಅನುದಾನದ ಜೊತೆಗೆ ಹೊಸ ಹೊಸ ಯೋಜನೆಗಳ ಪಟ್ಟಿಯನ್ನು ಬಜೆಟ್ ಪೂರ್ವಭಾವಿ ಸಭೆಗಳಲ್ಲಿ ಮುಖ್ಯಮಂತ್ರಿಯ ಮುಂದಿಟ್ಟಿದ್ದಾರೆ. ಜೊತೆಗೆ, ಕ್ಷೇತ್ರ ಅಭಿವೃದ್ಧಿಗಾಗಿ ಶಾಸಕರು ಪಕ್ಷಾತೀತವಾಗಿ ಅನುದಾನದ ಬೇಡಿಕೆ ಇಟ್ಟಿದ್ದಾರೆ. ಶಾಸಕರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ, ವಿಶೇಷ ಅನುದಾನ ಘೋಷಿಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
‘ಕಳೆದ ಕೆಲವು ದಿನಗಳಿಂದ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಪ್ರಸಕ್ತ ಸಾಲಿನ ಬಜೆಟ್ ಮೂಲಕ ಮಾಡಿದ್ದೇನೆ’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.