(ಚಿತ್ರ: X@BJP4Karnataka)
ಬೆಂಗಳೂರು: ಕರ್ನಾಟಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಸ್ಲಾಮೀಕರಣಗೊಳಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ರಾಜ್ಯ ಬಜೆಟ್ನಲ್ಲಿ ಮುಸ್ಲಿಮರಿಗೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಇದೊಂದು 'ಹಲಾಲ್ ಬಜೆಟ್', ಅಂಬೇಡ್ಕರ್ ಆಶಯಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದೆ.
ಬಜೆಟ್ನಲ್ಲಿ ಮುಸ್ಲಿಂಮರಿಗೆ ಹೆಚ್ಚಿನ ಘೋಷಣೆ ಮಾಡಲಾಗಿದ್ದು, ಈ ಕುರಿತು ಬಿಜೆಪಿ ಪಟ್ಟಿ ಮಾಡಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ, ಮುಸ್ಲಿಮರ ಸರಳ ಮದುವೆಗೆ ₹50 ಸಾವಿರ, ವಕ್ಫ್, ಖಬರಸ್ಥಾನಗಳ ಮೂಲಸೌಕರ್ಯಕ್ಕೆ ₹150 ಕೋಟಿ, ಮುಸ್ಲಿಮರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ₹50 ಲಕ್ಷ, ಮುಸ್ಲಿಮರು ಅತಿಹೆಚ್ಚು ವಾಸವಿರುವ ಪ್ರದೇಶದಲ್ಲಿ ITI ಸ್ಥಾಪನೆ, KEA ಅಡಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಶುಲ್ಕ ಕಡಿತ, ಉಲ್ಲಾಳದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ವಸತಿ ಸಹಿತ ಪಿ.ಯು ಕಾಲೇಜು, ಮುಸ್ಲಿಂ ವಿದ್ಯಾರ್ಥಿಗಳ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ ಏರಿಕೆ, ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣ, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿಯನ್ನು ಬಜೆಟ್ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದೆ.
ದೇಶದ ಯಾವುದೇ ರಾಜ್ಯದಲ್ಲೂ ಇಲ್ಲದ ಕಾಂಗ್ರೆಸ್ನ ದಿವಾಳಿ ಮಾಡೆಲ್ ಜಾರಿ ಆಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಅಂಬೇಡ್ಕರ್ ಆಶಯಗಳಿಗೆ ವಿರುದ್ಧ: ಬಿಜೆಪಿ
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬೋಗಸ್ ಬಜೆಟ್ನಲ್ಲಿ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿಯನ್ನು ನೀಡಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳಿಗೆ ಸಂಪೂರ್ಣ ವಿರುದ್ಧವಾದಂತಹದ್ದು!! ಕಾಂಗ್ರೆಸ್ ಪಕ್ಷಕ್ಕೆ ಬಾಬಾ ಸಾಹೇಬರ ಮೇಲೆ ಎಷ್ಟು ದ್ವೇಷವಿದೆ ಎಂಬುದು ಸಿದ್ದರಾಮಯ್ಯ ಅವರ ಸಂವಿಧಾನ ವಿರೋಧಿ ಬಜೆಟ್ನಿಂದ ಮತ್ತೊಮ್ಮೆ ಜಗಜ್ಜಾಹೀರಾಗಿದೆ ಎಂದು ಮಗದೊಂದು ಪೋಸ್ಟ್ನಲ್ಲಿ ಬಿಜೆಪಿ ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.