ನವದೆಹಲಿ: ಶುದ್ಧ ಕುಡಿಯುವ ನೀರು, ನೈರ್ಮಲ್ಯ ಮತ್ತು ಮಾಲಿನ್ಯವಿಲ್ಲದ ಪರಿಸರವು ಸಾರ್ವತ್ರಿಕ ಆರೋಗ್ಯವನ್ನು ಸಾಧಿಸುವಲ್ಲಿ ಅತ್ಯಂತ ಮಹತ್ವದ ಪಾತ್ರವಹಿಸುತ್ತವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಪದೇ ಪದೇ ಒತ್ತಿ ಹೇಳುತ್ತಿದೆ ಎಂಬುದನ್ನು ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ್ದಾರೆ.
ಈ ನಿಟ್ಟಿನಲ್ಲಿ 4,378 ನಗರ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯ 2.86 ಕೋಟಿ ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ‘ಜಲ ಜೀವನ್ ಮಿಷನ್(ನಗರ)’ ಯೋಜನೆ ಅನುಷ್ಠಾನಕ್ಕಾಗಿ ಈ ಸಾಲಿನಲ್ಲಿ ₹50 ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಅಟಲ್ ನಗರಗಳ ಪುನರ್ ನವೀಕರಣ ಮತ್ತು ನಗರ ಸುಧಾರಣೆ ಯೋಜನೆಯಡಿಯ (ಎಎಂಆರ್ಯುಟಿ) 500 ನಗರಗಳಲ್ಲಿ ದ್ರವ ತ್ಯಾಜ್ಯ ನಿರ್ವಹಣೆ ಐದು ವರ್ಷಗಳಲ್ಲಿ ಜಾರಿಗೆ ಬರಲಿದೆ ಎಂದು ಘೋಷಿಸಿದ್ದಾರೆ.
ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿ ಹೆಚ್ಚಳ: ಮುಂದಿನ ಹಣಕಾಸು ವರ್ಷದಲ್ಲಿ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯನ್ನು ₹30,000 ಕೋಟಿಯಿಂದ ₹40,000 ಕೋಟಿಗೆ ಹೆಚ್ಚಿಸಲಾಗಿದೆ.
ನರೇಗಾ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2020–21ನೇ ಸಾಲಿನಲ್ಲಿ ₹1,11,500 ಕೋಟಿ ಹಂಚಿಕೆ ಮಾಡಿದ್ದು, 2021–22ನೇ ಸಾಲಿಗೆ ₹73,000 ಕೋಟಿ ನೀಡಲಾಗಿದೆ. ಇದರಿಂದಾಗಿ, ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಕಲ್ಪಿಸಲು ಅನುಕೂಲವಾಗಲಿದೆ ಎಂದು ವಿವರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.